ಬೆಂಗಳೂರು: ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ ಅಡಿಯಲ್ಲಿ ಮತ್ತೊಂದು ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.
ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರಾಗಿಗುಡ್ಡ-ಸಿಲ್ಕ್ ಬೋರ್ಡ್ ನಡುವೆ ನಿರ್ಮಾಣವಾಗಿರುವ ಡಬಲ್ ಡೆಕ್ಕರ್ ಮಾದರಿಯಲ್ಲೇ ಈ ಯೋಜನೆ ಜಾರಿಯಾಗಲಿದೆ.
ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್ (K-RIDE) ಸಂಸ್ಥೆಯು ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ಸಂಪರ್ಕಿಸುವ ‘ಮಲ್ಲಿಗೆ’ (ಕಾರಿಡಾರ್-2) ಮಾರ್ಗದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಮತ್ತಿಕೆರೆಯ ಶ್ಯಾಮ್ ಪ್ರಸಾದ್ ಮುಖರ್ಜಿ ಮೇಲ್ಸೇತುವೆ ರಸ್ತೆಯಲ್ಲಿ ಸುಮಾರು 1.2 ಕಿಲೋಮೀಟರ್ ಉದ್ದದಲ್ಲಿ ₹199 ಕೋಟಿ ವೆಚ್ಚದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲಾಗುತ್ತಿದೆ.
ಈ ಯೋಜನೆಯ ವಿಶೇಷವೆಂದರೆ ಮೂರು ಹಂತದ ಸಂಚಾರ ವ್ಯವಸ್ಥೆ. ಕೆಳಭಾಗದಲ್ಲಿ ಸಾಮಾನ್ಯ ರಸ್ತೆ ಸಂಚಾರ, ಮೊದಲ ಹಂತದಲ್ಲಿ ವಾಹನಗಳ ಸಂಚಾರಕ್ಕೆ ಮೇಲ್ಸೇತುವೆ ಹಾಗೂ ಎರಡನೇ ಹಂತದಲ್ಲಿ ಉಪನಗರ ರೈಲು ಸಂಚಾರಕ್ಕೆ ಎಲಿವೇಟೆಡ್ ಕಾರಿಡಾರ್ ನಿರ್ಮಾಣವಾಗಲಿದೆ.
ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ನಡುವಿನ 24.86 ಕಿಲೋಮೀಟರ್ ಉದ್ದದ ‘ಮಲ್ಲಿಗೆ’ ಕಾರಿಡಾರ್ನಲ್ಲಿ ಒಟ್ಟು 14 ನಿಲ್ದಾಣಗಳು ಇರಲಿವೆ. ಚಿಕ್ಕಬಾಣಾವರ, ಮ್ಯಾದರಹಳ್ಳಿ, ಶೆಟ್ಟಿಹಳ್ಳಿ, ಜಾಲಹಳ್ಳಿ, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಹೆಬ್ಬಾಳ, ಕನಕನಗರ, ನಾಗವಾರ, ಕಾವೇರಿ ನಗರ, ಬಾಣಸವಾಡಿ, ಸೇವಾನಗರ, ಕಸ್ತೂರಿನಗರ ಹಾಗೂ ಬೈಯಪ್ಪನಹಳ್ಳಿ ಪ್ರಮುಖ ನಿಲ್ದಾಣಗಳಾಗಿವೆ.
ಪ್ರತಿದಿನ ಬೆಂಗಳೂರಿಗೆ ಸುಮಾರು 3 ಸಾವಿರಕ್ಕೂ ಹೆಚ್ಚು ಹೊಸ ವಾಹನಗಳು ಸೇರ್ಪಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಯಶವಂತಪುರ ಹಾಗೂ ಮತ್ತಿಕೆರೆ ಭಾಗದ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಈ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆ ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.



