HomeKarnataka Newsಒಂದೇ ರಾತ್ರಿ ಬೆಂಗಳೂರು ಬದಲಾಗುವುದಿಲ್ಲ: ಕಸ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡುವುದಾಗಿ ಕೃಷ್ಣ ಬೈರೇಗೌಡ...

ಒಂದೇ ರಾತ್ರಿ ಬೆಂಗಳೂರು ಬದಲಾಗುವುದಿಲ್ಲ: ಕಸ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡುವುದಾಗಿ ಕೃಷ್ಣ ಬೈರೇಗೌಡ ಭರವಸೆ

For Dai;y Updates Join Our whatsapp Group

Spread the love

ಬೆಂಗಳೂರು: ಸಚಿವ ಸಂಪುಟ ಪುನರ್ರಚನೆಯ ಬಳಿಕ ಬೆಂಗಳೂರು ಅಭಿವೃದ್ಧಿ ಖಾತೆಯ ಜವಾಬ್ದಾರಿ ಪಡೆದಿರುವ ಸಚಿವ ಕೃಷ್ಣ ಬೈರೇಗೌಡ ಅವರು, ಈ ಹುದ್ದೆ ಅತ್ಯಂತ ಸವಾಲಿನದ್ದಾಗಿದ್ದು, ನಗರದ ಜನರ ಜೀವನಮಟ್ಟ ಸುಧಾರಿಸುವುದೇ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕಂದಾಯ ಇಲಾಖೆಯಲ್ಲಿ ಆರಂಭಿಸಿರುವ ಹಲವು ಯೋಜನೆಗಳು ಮತ್ತು ಸುಧಾರಣಾ ಕಾರ್ಯಗಳನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಆದರೆ ನಾಯಕತ್ವವು ಬೆಂಗಳೂರು ಅಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ನೀಡಿದೆ ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಇಲಾಖೆ ಸುಲಭದ ಜವಾಬ್ದಾರಿಯಲ್ಲ. ನಗರವು ಸಂಚಾರ ದಟ್ಟಣೆ, ಕಸ ನಿರ್ವಹಣೆ, ಮೂಲಸೌಕರ್ಯ ಕೊರತೆ ಸೇರಿದಂತೆ ಹಲವು ಸಂಕೀರ್ಣ ಸಮಸ್ಯೆಗಳನ್ನು ಎದುರಿಸುತ್ತಿದೆ. ಎಲ್ಲ ಸಮಸ್ಯೆಗಳನ್ನೂ ತಕ್ಷಣ ಪರಿಹರಿಸುತ್ತೇವೆ ಎಂಬ ಭರವಸೆಯನ್ನು ಈಗಲೇ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಉಪ ಮುಖ್ಯಮಂತ್ರಿ ಆಗಿದ್ದ ವೇಳೆ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಅಡಿಪಾಯ ಹಾಕಿದ್ದಾರೆ ಎಂದು ಕೃಷ್ಣ ಬೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಹಲವು ಪ್ರಮುಖ ಯೋಜನೆಗಳ ಕಾರ್ಯ ಆರಂಭವಾಗಿದ್ದು, ಕೆಲವು ಯೋಜನೆಗಳನ್ನು ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿಯೇ ಪರಿಣಾಮಕಾರಿಯಾಗಿ ಮುನ್ನಡೆಸಲು ಸಾಧ್ಯವಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ನಗರದ ಕಸ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹಾಗೂ ನಾಗರಿಕರು ಪ್ರತಿನಿತ್ಯ ಎದುರಿಸುವ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

“ಬೆಂಗಳೂರು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಎಲ್ಲವನ್ನೂ ಒಂದೇ ದಿನದಲ್ಲಿ ಅಥವಾ ಒಂದೇ ರಾತ್ರಿ ಬದಲಾಯಿಸಲು ಸಾಧ್ಯವಿಲ್ಲ. ನಗರದ ಸಮಗ್ರ ಅಭಿವೃದ್ಧಿಗಾಗಿ ಕೆಲ ಕಠಿಣ ಮತ್ತು ದೂರದೃಷ್ಟಿಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಜನರು ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು” ಎಂದು ಕೃಷ್ಣ ಬೈರೇಗೌಡ ಮನವಿ ಮಾಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!