HomeKarnataka Newsಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: CM ಸಿದ್ದರಾಮಯ್ಯ

ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: CM ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ,

ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ ಹಾಗೂ ಎಂಎಲ್ ಸಿ ಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿಯವರ ದ್ವೇಷದ ರಾಜಕಾರಣ
ಬಿಜೆಪಿಯವರ ದ್ವೇಷದ ರಾಜಕಾರಣ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ ಎಂದರು.

ಸುಳ್ಳು ಪ್ರಕರಣಕ್ಕೆ ಮೊರೆ ಹೋಗುವ ಬಿಜೆಪಿ
ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 2 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು 148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದೆ ಎಂದರು.

ಪ್ರತಿ ಖಾತೆಗೆ ಹಣ: ಪ್ರಧಾನಿ ಮೋದಿಯವರ ಸುಳ್ಳು ಭರವಸೆ
ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು , ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು 1937 ರಲ್ಲಿ ಜವಾಹರ್ ಲಾಲ್ ನೆಹರೂ ರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ಈ ಪತ್ರಿಕೆಯನ್ನು ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ , ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಇವರ ಮೇಲೆ ಪ್ರಕರಣ ದಾಖಲಿಸಿ, ಇಡಿ ತನಿಖೆಯನ್ನು ಮಾಡಿಸಲಾಯಿತು. 2012 ರಲ್ಲಿ ಸುಬ್ರಮಣ್ಯಂಸ್ವಾಮಿಯವರು ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಇಡಿಯವರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನುಸುಳ್ಳು ಎಂದು ಹೈಕೋರ್ಟ್ ನ್ಯಾಯವನ್ನು ಎತ್ತಿಹಿಡಿದಿದೆ ಎಂದರು.

ಹೆಸರನ್ನು ಬದಲಾಯಿಸುವುದಷ್ಟೇ ಬಿಜೆಪಿ ಕಾಯಕ
ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ಬದಲಿಸಿ VB-G RaM Gಯೋಜನೆಯೆಂದು ಬದಲಿಸಿದ್ದಾರೆ. ರಾಜಭವನವನ್ನು ಇಂದು ಲೋಕಭವನ ಎಂದು ಬದಲಾಯಿಸಿದ್ದಾರೆ. ಇದು ಸರ್ಕಾರದ ಆಸ್ತಿಯಾಗಿದ್ದು, ಇದರ ಹೆಸರನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಹೆಸರು ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿಲ್ಲ ಎಂದರು.

ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿಯಿಲ್ಲ
ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ರವರ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಯವರಿಗೆ ಬಡವರನ್ನೂ ಕಂಡರೂ ಆಗುವುದಿಲ್ಲ. ದೇಶದ ಬಡವರಿಗೆಂದು ತಂದಿರುವ ಯಾವುದೇ ಯೋಜನೆಗಳಿಗೆ ಬಿಜೆಪಿಯವರ ಸಹಮತಿಯಿಲ್ಲ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವ ಬಿಜೆಪಿಯವರು , ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು. ಆದರೆ ಈ ಜನಪರ ಯೋಜನೆಯನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ ಎಂದರು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ
ಇಂದು ಈ ತೀರ್ಪಿನ ಪರವಾಗಿ ಪ್ರತಿಭಟನೆಯನ್ನು ಕೈಗೊಂಡಿದ್ದು, ಸದನದ ಒಳಗೆ ಮತ್ತು ಹೊರಗೆ ಈ ಪ್ರತಿಭಟನೆಯನ್ನು ಮುಂದುವರೆಸಲಿದ್ದೇವೆ. ರಾಜ್ಯ ಹಾಗೂ ದೇಶದುದ್ದಕ್ಕೂ ಬಿಜೆಪಿಯ ಕುತಂತ್ರ ನೀತಿಯನ್ನು ವಿರೋಧಿಸಿ ಪ್ರತಿಭಟನೆಯನ್ನು ಕೈಗೊಳ್ಳುತ್ತೇವೆ. ಕಾಂಗ್ರೆಸ್ ಎಂದಿಗೂ ಕೈಕಟ್ಟಿ ಕೂರುವ ಪಕ್ಷವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಪಕ್ಷ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಆದರೆ ಈಗ ದ್ವೇಷ ರಾಜಕಾರಣವನ್ನು ಮಾಡುತ್ತಿದೆ. ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು ಎಂದರು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!