ಹುಬ್ಬಳ್ಳಿ: ನಗರದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಸ್ಲಮ್ ಬೋರ್ಡ್ನಿಂದ ಬಡವರಿಗೆ ಒಂದೇ ಒಂದು ಮನೆ ಕೊಟ್ಟಿರುವುದನ್ನು ಸಾಬೀತುಪಡಿಸಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ರಾಜಕೀಯವನ್ನೇ ತ್ಯಜಿಸುತ್ತೇನೆ ಎಂದು ಅವರು ಬಹಿರಂಗವಾಗಿ ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಅಧಿಕಾರದಲ್ಲಿದ್ದಾಗ ಯಾವುದೇ ಗ್ಯಾರಂಟಿ ಯೋಜನೆಗಳ ಒತ್ತಡ ಇರಲಿಲ್ಲ. ಆದರೂ ಬಡವರಿಗೆ ಮನೆ ಕೊಡಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ನಡುವೆಯೂ ಮನೆ ನಿರ್ಮಾಣ ಮತ್ತು ಹಂಚಿಕೆ ಕಾರ್ಯ ಮುಂದುವರಿಸಿದೆ ಎಂದು ಹೇಳಿದರು.
2024ರಲ್ಲಿ 36,789 ಮನೆಗಳನ್ನು ಈಗಾಗಲೇ ವಿತರಿಸಲಾಗಿದೆ. ಇದೀಗ ಎರಡನೇ ಹಂತದಲ್ಲಿ 42,345 ಮನೆಗಳನ್ನು ಜನವರಿ 24ರಂದು ಹಂಚಿಕೆ ಮಾಡಲಾಗುತ್ತದೆ. ಮೂರನೇ ಹಂತದಲ್ಲಿ ಸುಮಾರು 30 ಸಾವಿರ ಮನೆಗಳನ್ನು ಏಪ್ರಿಲ್–ಮೇ ತಿಂಗಳಲ್ಲಿ ವಿತರಿಸುವ ಗುರಿ ಇದೆ. ಒಟ್ಟು 1,80,253 ಮನೆಗಳ ನಿರ್ಮಾಣ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಮನೆಗೆ ರಾಜ್ಯ ಸರ್ಕಾರ 4 ಲಕ್ಷ ರೂ. ನೀಡುತ್ತಿದ್ದು, ಕೇಂದ್ರ–ರಾಜ್ಯ ಸಬ್ಸಿಡಿಯೊಂದಿಗೆ ಫಲಾನುಭವಿಗಳು ಕೇವಲ 1 ಲಕ್ಷ ರೂ. ಪಾವತಿಸಬೇಕಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ 20,363 ಮಂದಿಗೆ ಹಕ್ಕುಪತ್ರ ವಿತರಿಸಲಾಗುತ್ತದೆ ಎಂದರು.
ಹುಬ್ಬಳ್ಳಿಯಲ್ಲಿ 1,008 ಮನೆ ಸೇರಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 2,767 ಮನೆ ಹಂಚಿಕೆ ಮಾಡಲಾಗುತ್ತಿದೆ. ಜನವರಿ 24ರ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಒಟ್ಟಿನಲ್ಲಿ, ಜಮೀರ್ ಅಹ್ಮದ್ ಅವರ ಈ ಸವಾಲು ಮತ್ತು ಅಂಕಿಅಂಶಗಳು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಭಾರೀ ಚರ್ಚೆಗೆ ವೇದಿಕೆ ಸಿದ್ಧಪಡಿಸಿದೆ.



