ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಜಿಲ್ಲೆಯ ಬ್ರಾಹ್ಮಣ ಸಮಾಜದ ಜಿಲ್ಲಾ ಸಮಾವೇಶ, ಸಾಧಕರಿಗೆ ಸನ್ಮಾನ ಹಾಗೂ ೨೦೨೫ನೇ ಸಾಲಿನ ದಿನದರ್ಶಿಕೆ ಬಿಡುಗಡೆ ಸಮಾರಂಭವನ್ನು ಸಂಭಾಪುರ ರಸ್ತೆಯ ಶಂಕರ ಮಠದಲ್ಲಿ ಡಿ. ೨೯ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ ಕುಲಕರ್ಣಿ ಹೇಳಿದರು.
ಶುಕ್ರವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸವದತ್ತಿ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ, ರೋಣ ಶಾಸಕ ಜಿ.ಎಸ್. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಬ್ರಾಹ್ಮಣ ಸಂಘ ಸಮಾಜ ಹಾಗೂ ಸರಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ. ಸಮಾಜ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಅನೇಕ ತಜ್ಞರು ಸಮಾರಂಭದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವೈದಿಕ ವಿದ್ವಾಂಸ ರತ್ನಾರಭಟ್ ಜೋಶಿ, ಶ್ರೀನಿವಾಸ ಹುಯಿಲಗೋಳ, ಅನಿಲ ತೆಂಬದಮನಿ, ದತ್ತಣ್ಣ ಜೋಶಿ, ರವೀಂದ್ರ ಜೋಶಿ ಮುಂತಾದವರಿದ್ದರು.



