ವಿಜಯಸಾಕ್ಷಿ ಸುದ್ದಿ, ಗದಗ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.28ರಂದು ಅರ್ಥಪೂರ್ಣವಾಗಿ, ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರು ಹಾಗೂ ಸಾರ್ವಜನಿಕರಿಗೆ ವಿತರಿಸಬೇಕು. ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಹಾಗೂ ತಾಲೂಕು ಮಟ್ಟದಲ್ಲಿಯೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರತಿಭಾವಂತರು, ಸಾಧಕರಿಗೆ ಸನ್ಮಾನ
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು, ಪದವಿ ಹಂತದಲ್ಲಿ ಚಿನ್ನದ ಪದಕ ಪಡೆದವರು, ಕ್ರೀಡಾ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರನ್ನು ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಚಿಂತನೆ ಹಾಗೂ ಸಾಮಾಜಿಕ ಕೊಡುಗೆಗಳ ಕುರಿತು ಆಳವಾದ ಅಧ್ಯಯನ ನಡೆಸಿದವರಿಂದ ವಿಶೇಷ ಉಪನ್ಯಾಸ ಆಯೋಜಿಸುವಂತೆ ತಿಳಿಸಿದರು.
ಕಾರ್ಯಕ್ರಮದ ವೇದಿಕೆ, ಊಟೋಪಹಾರ ಸೇರಿದಂತೆ ಅಗತ್ಯ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಪುಸ್ತಕ ಬಿಡುಗಡೆ ಮಾಡುವ ಬಗ್ಗೆಯೂ ಚರ್ಚೆ ನಡೆಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕ್ಷಕ ರಾಜಕುಮಾರ ಸೊಪಡ್ಲ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಗಣ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು.
“ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಾಮಾಜಿಕ ಸಂದೇಶಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅರ್ಥಪೂರ್ಣವಾಗಿ ನಡೆಸಬೇಕು.”
— ಡಾ. ದುರಗೇಶ್ ಕೆ.ಆರ್., ಅಪರ ಜಿಲ್ಲಾಧಿಕಾರಿ



