ವಿಜಯಸಾಕ್ಷಿ ಸುದ್ದಿ, ಗದಗ: ಸಚಿವ ಸಂಪುಟ ವಿಸ್ತರಣೆಯಲ್ಲಿ ಗದಗ ಶಾಸಕ ಹಾಗೂ ಮಾಜಿ ಸಚಿವ ಡಾ. ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗದಿರುವುದು ಜಿಲ್ಲೆಯ ಜನರಲ್ಲಿ ಬೇಸರ ಮೂಡಿಸಿದೆ. ಆದರೆ ಈ ಹಿನ್ನೆಲೆಯಲ್ಲಿ ನಗರಸಭೆ ಸದಸ್ಯರು ರಾಜೀನಾಮೆ ನೀಡಿರುವ ನಿರ್ಧಾರವನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಾಮಾಜಿಕ ಚಿಂತಕ ವಿಶ್ವನಾಥ ಶೀರಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಸಚಿವರಾಗದಿದ್ದರೂ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಹೊಂದಿರುವ ಅನುಭವ, ಪ್ರಭಾವ ಮತ್ತು ಕಾರ್ಯಕ್ಷಮತೆಯಿಂದ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ನಗರಸಭೆ ಸದಸ್ಯರು ರಾಜೀನಾಮೆ ನೀಡುವ ಬದಲು ತಮ್ಮ ನಾಯಕತ್ವದ ಮಾರ್ಗದರ್ಶನದಲ್ಲಿ ನಗರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಜನರು ನೀಡಿರುವ ಜನಾದೇಶವನ್ನು ಗೌರವಿಸಿ ಸಾರ್ವಜನಿಕ ಸೇವೆಯನ್ನು ಮುಂದುವರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ಸಂಘಟನೆ ಬಲಪಡಿಸಿ, ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದು ಸೂಕ್ತ. ಜನರ ವಿಶ್ವಾಸ ಉಳಿಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಬೇಕು ಎಂದು ಅವರು ತಿಳಿಸಿದ್ದಾರೆ.
“ನಾಯಕನಿಗೆ ಬಲ ತುಂಬುವ ನಿರ್ಧಾರಗಳೇ ಜನಪ್ರತಿನಿಧಿಗಳಿಂದ ಬರಬೇಕು. ರಾಜೀನಾಮೆಗಿಂತ ಅಭಿವೃದ್ಧಿಗೆ ಕೈಜೋಡಿಸುವುದು ಜನಾದೇಶಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ.”
– ವಿಶ್ವನಾಥ ಶೀರಿ, ಸಾಮಾಜಿಕ ಚಿಂತಕ



