Homehubballiಕಾನೂನು ಬಾಹಿರ ಜಾಹೀರಾತುಗಳನ್ನು ತೆರವುಗೊಳಿಸಿ

ಕಾನೂನು ಬಾಹಿರ ಜಾಹೀರಾತುಗಳನ್ನು ತೆರವುಗೊಳಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಪಾದಚಾರಿ ಮಾರ್ಗವನ್ನು ಅತಿಕ್ರಮಣ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಜಾಹೀರಾತು ಫಲಕಗಳಲ್ಲಿ ಮಾತ್ರ ಜಾಹೀರಾತುಗಳನ್ನು ಅಳವಡಿಸದೇ ಗೋಡೆ, ಮರದ ಕೊಂಬೆಗಳಲ್ಲಿ ಜಾಹೀರಾತುಗಳನ್ನು ಅಂಟಿಸಲಾಗಿದೆ. ಪಾದಚಾರಿ ಮಾರ್ಗ ಅತಿಕ್ರಮಣ ಮತ್ತು ಕಾನೂನು ಬಾಹಿರ ಜಾಹೀರಾತುಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಮಟ್ಟದ ಸಮಿತಿಯ ಅಧ್ಯಕ್ಷ, ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು.

ಸೋಮವಾರ ಸರ್ಕ್ಯೂಟ್ ಹೌಸ್‌ನಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಧಾರವಾಡ ವಿಭಾಗ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಘನ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಫುಟ್‌ಪಾತ್ ಮೇಲೆ ಬೈಕ್ ಮತ್ತು ಕಾರುಗಳನ್ನು ನಿಲ್ಲಿಸಿರುವುದು ಗಮನಕ್ಕೆ ಬಂದಿದೆ. ಪಾದಚಾರಿ ಮಾರ್ಗದಲ್ಲಿ ಯಾವುದೇ ವಾಹನ ನಿಲ್ಲಿಸದಂತೆ ಕ್ರಮ ಕೈಗೊಳ್ಳಬೇಕು. ವಾಹನ ಸವಾರರು ಪುಟಪಾತ್ ಮೇಲೆ ವಾಹನ ನಿಲ್ಲಿಸಿದರೆ ದಂಡವನ್ನು ವಿಧಿಸಬೇಕು. ಡಿಜಿಟಲ್ ಜಾಹೀರಾತು ಫಲಕಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಅನಧಿಕೃತವಾಗಿ ಜಾಹೀರಾತುಗಳನ್ನು ಬಿತ್ತರಿಸುವವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಒಳಂಚರಂಡಿಯ ಒಟ್ಟಾರೆ ಉದ್ದ, ಪೂರ್ಣಗೊಂಡ ಒಳಚರಂಡಿ ಕಾಮಗಾರಿಗಳು ಮತ್ತು ಉಳಿದ ಕಾಮಗಾರಿಯ ಮಾಹಿತಿ, ತಪ್ಪಿ ಹೋಗಿರುವ ಒಳಚರಂಡಿ ಸಂಪರ್ಕಗಳು, ಮನೆ ಮನೆಯಿಂದ ಸಂಗ್ರಹವಾಗುವ ತ್ಯಾಜ್ಯಗಳು ಸೇರಿದಂತೆ ಇತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸಬೇಕು. ಆ ಮೂಲಕ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿವೆ ಎಂದರು.

ಮೂಲದಲ್ಲಿಯೇ ತ್ಯಾಜ್ಯ ವಸ್ತುಗಳನ್ನು ಹಸಿ ಕಸ, ಒಣ ಕಸ ಮತ್ತು ಗೃಹ ಬಳಕೆಯ ಹಾನಿಕಾರಕ ತ್ಯಾಜ್ಯ ಎಂದು ವಿಂಗಡಿಸಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಪಾರಂಪರಿಕ ಮತ್ತು ಕಟ್ಟಡ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ನಗರಗಳಲ್ಲಿರುವ ಕಸಾಯಿಖಾನೆಗಳಲ್ಲಿ ಸಹ ಹೆಚ್ಚಾಗಿ ತ್ಯಾಜ್ಯ ಸಂಗ್ರಹವಾಗುತ್ತದೆ. ಕಸಾಯಿ ಖಾನೆಗಳಲ್ಲಿನ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಕಸಾಯಿ ಖಾನೆ ಮಾಲೀಕರಿಗೆ ಅಧಿಕಾರಿಗಳು ತಿಳಿಸಬೇಕು ಎಂದು ತಿಳಿಸಿದರು.
ಏಷ್ಯಾದ ಎರಡನೇ ದೊಡ್ಡ ಎಪಿಎಂಸಿ ಮಾರುಕಟ್ಟೆಯಲ್ಲಿ ಅಪಾರ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗುವುದು. ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜಲ ಹಾಗೂ ವಾಯು ಮಾಲಿನ್ಯವಾಗದಂತೆ ಕ್ರಮ ವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ ಮಾತನಾಡಿ, ಒಳ ಚರಂಡಿ ವ್ಯವಸ್ಥೆ ಬಗ್ಗೆ ಸಮಗ್ರ ಮಾಹಿತಿ ಸಿದ್ಧಪಡಿಸಲಾಗುವುದು. ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮುಂದಿನ ಒಂದು ತಿಂಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ನ್ನು ನಿಯಂತ್ರಣಕ್ಕೆ ತರಲಾಗುತ್ತದೆ ಎಂದರು.
ಸಭೆಯಲ್ಲಿ ಪರಿಸರ ಅಧಿಕಾರಿ ಜಗದೀಶ್, ಪಾಲಿಕೆಯ ವಲಯ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು-2016ರಂತೆ ಏಕ ಬಳಕೆಯ ಪ್ಲಾಸ್ಟಿಕ್‌ನ್ನು ನಿಷೇಧಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಉಪಯೋಗಿಸುವವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ದಂಡವನ್ನು ವಿಧಿಸಿ, ಅವರ ವ್ಯಾಪಾರ ಪರವಾನಗಿಯನ್ನು ರದ್ದುಪಡಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಣ ಮಾಡಿ. ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಪ್ಲಾಸ್ಟಿಕ್ ತಯಾರಿಸುವ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ, ಸೂಕ್ತ ಕ್ರಮ ವಹಿಸಬೇಕು ಎಂದು ಸುಭಾಷ್ ಆಡಿ ಸೂಚಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!