ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವಾರು ಭಾಗಗಳಲ್ಲಿ ಇಂದು ಒಣ ಹವಾಮಾನ ಮುಂದುವರಿಯಲಿದೆ.
ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಕಾಣಿಸಿಕೊಂಡಿದ್ದು, ಗಾಳಿಯ ಗುಣಮಟ್ಟದಲ್ಲೂ ಸ್ವಲ್ಪ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 15°C ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 14°C ಇದೆ. ನಗರದಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 24.4°C ಹಾಗೂ ಗ್ರಾಮಾಂತರ ಭಾಗದಲ್ಲಿ 24.6°C ಇರಲಿದೆ.
ಇದೇ ತಾಪಮಾನ ಶುಕ್ರವಾರ (ಡಿ.19) ಮತ್ತು ಶನಿವಾರ (ಡಿ.20) ಕೂಡ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಂಜಿನ ವಾತಾವರಣ ಕಂಡುಬರಲಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮಂಜು ಹಾಗೂ ಮಬ್ಬು ಎರಡೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆಯೂ ಒಣ ಹವಾಮಾನ ಮುಂದುವರಿಯಲಿದೆ. ಈ ಭಾಗಗಳಲ್ಲಿ ಕನಿಷ್ಠ ತಾಪಮಾನ 12°C ರಿಂದ 14°C ನಡುವೆ ದಾಖಲಾಗುವ ನಿರೀಕ್ಷೆಯಿದ್ದು, ಬೆಳಿಗ್ಗೆ ಹೆಚ್ಚು ಚಳಿ, ಕೆಲವು ಕಡೆ ಮಂಜು ಹಾಗೂ ಸೂರ್ಯಾಸ್ತದ ನಂತರ ತೀವ್ರ ಚಳಿಯ ಅನುಭವವಾಗಲಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಆಕಾಶ ಸಾಮಾನ್ಯವಾಗಿ ಶುಭ್ರವಾಗಿದ್ದು, ಸೂರ್ಯಾಸ್ತದ ಬಳಿಕ ತಾಪಮಾನದಲ್ಲಿ ತೀವ್ರ ಕುಸಿತ ಕಂಡುಬರುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಾತ್ರ ಮಧ್ಯಮ ಉಷ್ಣತೆ ಹಾಗೂ ತೇವಾಂಶ ಮುಂದುವರಿಯಲಿದ್ದು, ಮಂಗಳೂರು ಸೇರಿದಂತೆ ಕರಾವಳಿ ನಗರಗಳಲ್ಲಿ ಗರಿಷ್ಠ ತಾಪಮಾನ ಸುಮಾರು 33°C ಸಮೀಪ ಇರಲಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ತಂಪಾದ ಹವಾಮಾನ ಅನುಭವವಾಗಲಿದೆ. ಬೀದರ್, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಶೀತ ಅಲೆ ಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಒಳನಾಡು ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇರುವುದರಿಂದ, ಬೆಳಗಿನ ಪ್ರಯಾಣಿಕರು ವಿಶೇಷ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ಇಂದು ರಾಜ್ಯದ ಯಾವುದೇ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇಲ್ಲ. ಮಳೆಯ ಸಾಧ್ಯತೆ ಶೂನ್ಯ (0%) ಎಂದು ಇಲಾಖೆ ಸ್ಪಷ್ಟಪಡಿಸಿದೆ.



