ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವಿರುದ್ಧ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಅವಹೇಳನಕಾರಿ ಮಾತನಾಡಿದ ದೇಶದ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ದೂರು ನೀಡಲಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ತಿಳಿಸಿದ್ದಾರೆ.
ಚುನಾವಣಾಧಿಕಾರಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೆಲ್ಫೇರ್ ಪಾರ್ಟಿಯು ದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಅಮಿತ್ ಶಾ ಸುಳ್ಳು ಆರೋಪ ಹೊರಿಸಿದ್ದರು. ಇದು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ. ವೆಲ್ಫೇರ್ ಪಾರ್ಟಿ ಚುನಾವಣಾ ಆಯೋಗದಲ್ಲಿ ಅಧಿಕೃತವಾಗಿ ನೋಂದಾಯಿತ ಪಕ್ಷವಾಗಿದ್ದು, ಕಳೆದ 13 ವರುಷಗಳಿಂದ ಸಂವಿಧಾನಿಕವಾಗಿ ಸೇವೆ ಸಲ್ಲಿಸುತ್ತಿದೆ.
ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿ ಯಾವುದೇ ಸಾಧನೆ ಮಾಡದೆ ಸೋಲಿನ ಸುಳಿವು ಸಿಕ್ಕಿದಾಗ ಹತಾಶರಾದ ಶಾ ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ಹಬಿಬುಲ್ಲಾಹ ಖಾನ್, ಪ್ರಧಾನ ಕಾರ್ಯದರ್ಶಿ ರಿಯಾಝ್, ಮುಖಂಡರಾದ ಪ್ರಭಾಕರ್ ಇದ್ದರು.



