HomeGadag Newsನರೇಗಲ್ಲದಲ್ಲಿ ಕಲುಷಿತ ನೀರು ಪೂರೈಕೆ: ನೀರಿನಲ್ಲಿ ಕೀಟಗಳು, ಜನರಲ್ಲಿ ಆತಂಕ

ನರೇಗಲ್ಲದಲ್ಲಿ ಕಲುಷಿತ ನೀರು ಪೂರೈಕೆ: ನೀರಿನಲ್ಲಿ ಕೀಟಗಳು, ಜನರಲ್ಲಿ ಆತಂಕ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಪಂಚಾಯಿತಿಯಿಂದ ನರೇಗಲ್ಲ ಪಟ್ಟಣ ಸೇರಿದಂತೆ ಕೋಡಿಕೊಪ್ಪ, ಕೋಚಲಾಪೂರ, ತೋಟಗಂಟಿ, ದ್ಯಾಂಪೂರ ಹಾಗೂ ಮಲ್ಲಾಪೂರ ಗ್ರಾಮಗಳಿಗೆ ಪ್ರತಿನಿತ್ಯ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದ್ದು, ಕೆಂಪು ಬಣ್ಣದ ಕೊಳಕು ನೀರಿನಲ್ಲಿ ಸಣ್ಣ ಸಣ್ಣ ಕೀಟಗಳು ಕಾಣಸಿಗುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ಒಂದು ವಾರದಿಂದ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರು ಪಟ್ಟಣ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಳಕು ನೀರಿನಿಂದ ಮನೆಗಳಲ್ಲಿರುವ ನೀರು ಶುದ್ಧೀಕರಣ ಫಿಲ್ಟರ್‌ಗಳೇ ಹಾಳಾಗುತ್ತಿವೆ. ಫಿಲ್ಟರ್‌ಗಳನ್ನೇ ಹಾಳು ಮಾಡುವಷ್ಟು ಕಲುಷಿತ ನೀರು ಸರಬರಾಜಾಗುತ್ತಿದ್ದರೆ, ಯಾವುದೇ ಫಿಲ್ಟರ್ ವ್ಯವಸ್ಥೆ ಇಲ್ಲದೆ ಇದೇ ನೀರನ್ನು ಕುಡಿಯುವ ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

ನೀರಿನಲ್ಲಿ ಬಾಲಹುಳು ಸೇರಿದಂತೆ ಸಣ್ಣ ಸಣ್ಣ ಕೀಟಗಳು ಕಾಣಸಿಗುತ್ತಿದ್ದು, ಜೀವಭಯದಲ್ಲೇ ನೀರು ಕುಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಗುಣಮಟ್ಟವನ್ನು ತಕ್ಷಣವೇ ಪರಿಶೀಲಿಸಿ, ಕಲುಷಿತ ನೀರು ಸರಬರಾಜಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಜಿಗಳೂರು ಸಮೀಪ ನಿರ್ಮಿಸಿರುವ ನೀರು ಶುದ್ಧೀಕರಣ ಘಟಕ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನವೂ ಸಾರ್ವಜನಿಕರಲ್ಲಿ ಮೂಡಿದೆ. ಕಲುಷಿತ ನೀರು ಸರಬರಾಜಾಗುತ್ತಿರುವುದಕ್ಕೆ ಹೊಣೆ ಯಾರು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಟ್ಟಣದ ಜನರಿಗೆ ಕನಿಷ್ಠ ಮೂಲಸೌಕರ್ಯವನ್ನೇ ಸಮರ್ಪಕವಾಗಿ ಒದಗಿಸಲು ಸಾಧ್ಯವಾಗದಿದ್ದರೆ, ಇನ್ನುಳಿದ ಅಭಿವೃದ್ಧಿ ಕಾರ್ಯಗಳನ್ನು ಯಾವ ರೀತಿ ಕೈಗೊಳ್ಳುತ್ತಾರೆ ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

ಪಟ್ಟಣದಲ್ಲಿ 24×7 ಕುಡಿಯುವ ನೀರು ಸರಬರಾಜು ಯೋಜನೆ ನೆನೆಗುದಿಗೆ ಬಿದ್ದು ವರ್ಷಗಳೇ ಕಳೆದಿವೆ. ನೀರು ಸರಬರಾಜು ಯೋಜನೆಗಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆಗಳನ್ನು ಅಗೆದು ಹಾಕಲಾಗಿದ್ದು, ರಸ್ತೆಗಳು ಗುಂಡಿಮಯವಾಗಿವೆ ಎಂಬ ಆರೋಪವೂ ಕೇಳಿಬಂದಿದೆ.

ಕುಡಿಯುವ ನೀರಿನ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ, ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನರೇಗಲ್ಲ ಪಟ್ಟಣ ಪಂಚಾಯಿತಿಯ ನೀರು ಸರಬರಾಜು ಸಿಬ್ಬಂದಿ ಶಂಕ್ರಪ್ಪ ದೊಡ್ಡಣ್ಣವರ, ಜಿಗಳೂರು ಕೆರೆಯಲ್ಲಿ ನೀರಿನ ಅಭಾವ ಎದುರಾಗಿದ್ದು, ಕೆರೆಯ ತಳಮಟ್ಟದ ನೀರನ್ನು ಸರಬರಾಜು ಮಾಡುತ್ತಿರುವುದರಿಂದ ನೀರು ಕಲುಷಿತಗೊಂಡಿದೆ. ಕೆರೆಗೆ ಸಮರ್ಪಕವಾಗಿ ನೀರು ಬಂದ ತಕ್ಷಣ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಪಟ್ಟಣ ಪಂಚಾಯಿತಿಯಿಂದ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ನೀರಿನಲ್ಲಿ ಬಾಲಹುಳು ಸೇರಿದಂತೆ ಸಣ್ಣ ಸಣ್ಣ ಕೀಟಗಳು ಕಾಣಸಿಗುತ್ತಿವೆ. ಜೀವಭಯದಲ್ಲೇ ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಗುಣಮಟ್ಟವನ್ನು ತಕ್ಷಣ ಪರಿಶೀಲಿಸಿ, ಕಲುಷಿತ ನೀರು ಸರಬರಾಜಾಗದಂತೆ ಕ್ರಮ ಕೈಗೊಳ್ಳಬೇಕು.

— ಅನೀತಾ ವೈದ್ಯಮಠ, ನಿವಾಸಿ, ನರೇಗಲ್ಲ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img