ಬೆಂಗಳೂರು: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಸಂಬಂಧಿತ ಪರೀಕ್ಷಾ ಕೇಂದ್ರವಾಗಿದ್ದ ಕಾಲೇಜಿನ ಪರವಾನಗಿಯನ್ನು ರದ್ದುಪಡಿಸುವಂತೆ ಮಹಾಸಭಾ ಆಗ್ರಹಿಸಿದೆ. ಜೊತೆಗೆ, ಘಟನೆಗೆ ಕಾರಣವಾದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂಪಾಯಿ ದಂಡ ವಿಧಿಸಬೇಕೆಂದು ಒತ್ತಾಯಿಸಿದೆ.
ರಾಜ್ಯದಲ್ಲಿ ಸಿಇಟಿ ಪರೀಕ್ಷಾರ್ಥಿಗಳಿಂದ ಜನಿವಾರ ತೆಗೆಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲದಿದ್ದರೂ ಈ ಕ್ರಮ ಕೈಗೊಂಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ನಡುವೆ ಮಡಿವಾಳ ಠಾಣೆ ಪೊಲೀಸರು ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ತಿಳಿಸಿದ್ದಾರೆ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷವೂ ಇದೇ ರೀತಿಯ ಘಟನೆ ನಡೆದ ಸಂದರ್ಭದಲ್ಲಿ ಮಹಾಸಭಾ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 2025ರ ಡಿಸೆಂಬರ್ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಮತ್ತೆ ಇದೇ ರೀತಿಯ ಘಟನೆ ನಡೆದಿರುವುದು ಆತಂಕಕಾರಿ ಎಂದು ಆರೋಪಿಸಲಾಗಿದೆ.
ಇದಲ್ಲದೆ, ಚಿಕ್ಕಬಳ್ಳಾಪುರದಲ್ಲಿಯೂ ಇಂತಹದ್ದೇ ಘಟನೆ ಸಂಭವಿಸಿರುವ ಮಾಹಿತಿ ಲಭ್ಯವಾಗಿದ್ದು, ಅಲ್ಲಿ ಸಹ ಪ್ರತಿಭಟನೆಗಳು ನಡೆಯುತ್ತಿವೆ ಎಂದು ರಘುನಾಥ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ವಿಳಂಬವಾಗುತ್ತಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಮಹಾಸಭಾ ಎಚ್ಚರಿಕೆ ನೀಡಿದೆ.



