ಗದಗ: ಗದಗ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ 5 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 11 ಮೊಬೈಲ್ ಫೋನ್ಗಳು, ಬ್ಯಾಂಕ್ ಪಾಸ್ಬುಕ್ಗಳು, ಎಟಿಎಂ ಕಾರ್ಡ್ಗಳು, ಸಿಮ್ ಕಾರ್ಡ್ಗಳು ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ಮಾಹಿತಿಯ ಕಿಟ್ಗಳನ್ನು ಜಪ್ತಿ ಮಾಡಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ದಾಸರಹಳ್ಳಿ ತಾಂಡಾದ ಆರೋಪಿಗಳು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಸ್ಕಾಲರ್ಶಿಪ್ ಹಾಗೂ ಇತರೆ ಆಮಿಷಗಳನ್ನು ನೀಡಿ ನಂಬಿಕೆ ಗಳಿಸುತ್ತಿದ್ದರು. ಬಳಿಕ ಅವರ ಹೆಸರಿನಲ್ಲಿ ಗದಗ ನಗರದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾತೆಗಳನ್ನು ತೆರೆಯಿಸಿ, ಪಾಸ್ಬುಕ್, ಎಟಿಎಂ ಕಾರ್ಡ್ ಮತ್ತು ಇತರೆ ಮಾಹಿತಿಗಳನ್ನು ಪಡೆದು ಸೈಬರ್ ವಂಚನೆಗೆ ಬಳಸುತ್ತಿದ್ದರು.
ಮಾರ್ಚ್ 11, 2026ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಾಂತ್ರಿಕ ಮಾಹಿತಿ ಆಧಾರದಲ್ಲಿ ಗೋವಾಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಜಾರ್ಖಂಡ್ ಹಾಗೂ ಛತ್ತೀಸ್ಗಢ ಮೂಲದವರೂ ಸೇರಿದ್ದು, ಗೋವದಲ್ಲಿ ನೆಲೆಸಿ ವಂಚನೆ ಜಾಲ ವಿಸ್ತರಿಸಲು ಯತ್ನಿಸುತ್ತಿದ್ದರು ಎನ್ನಲಾಗಿದೆ.
ಆರೋಪಿತರಿಂದ 8 ಬ್ಯಾಂಕ್ ಖಾತೆಗಳ ಕಿಟ್ಗಳು ಹಾಗೂ ಹಾವೇರಿ, ಗದಗ ಜಿಲ್ಲೆಯ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಮೂವರು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ಪ್ರಕರಣ ರಾಜ್ಯ ಮಟ್ಟದ ದೊಡ್ಡ ಸೈಬರ್ ವಂಚನೆ ಜಾಲವಾಗಿರುವ ಸಾಧ್ಯತೆ ಇದ್ದು, ಸಾರ್ವಜನಿಕರು ಇಂತಹ ಆಮಿಷಗಳಿಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕೆಂದು ಎಸ್ಪಿ ರೋಹನ್ ಜಗದೀಶ್ ಮನವಿ ಮಾಡಿದ್ದಾರೆ.



