ನವದೆಹಲಿ: ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 8 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಕಟ್ಟಡದ ಒಳಗೆ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದ್ದು, ಅವರನ್ನು ರಕ್ಷಿಸಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ. ಅಗ್ನಿಶಾಮಕ ಸಿಬ್ಬಂದಿಗೆ ನೆರವಾಗಲು ಪೊಲೀಸರು ಸಹ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಈ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



