ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಹಂಪಾಪಟ್ಟಣ ಪದವಿಪೂರ್ವ ಕಾಲೇಜು ಹೋರಾಟ ಸಮಿತಿ ಸದಸ್ಯರು ಕ್ಷೇತ್ರದ ಶಾಸಕ ಕೆ. ನೇಮಿರಾಜನಾಯ್ಕ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿ ಸಂಚಾಲಕ ಬುಡ್ಡಿ ಬಸವರಾಜ್ ಮಾತನಾಡಿ, ಹಂಪಾಪಟ್ಟಣ ಗ್ರಾಮವು ಸುತ್ತಮುತ್ತಲಿನ 12ಕ್ಕೂ ಹೆಚ್ಚು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ಈ ಭಾಗದ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣಕ್ಕಾಗಿ ದೂರದ ಪಟ್ಟಣಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಂಪಾಪಟ್ಟಣದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಆರಂಭಿಸುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದರು.
ಆಗಸ್ಟ್ 13ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಹಂಪಾಪಟ್ಟಣಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು ಮಂಜೂರು ಮಾಡುವ ಕುರಿತು ಪ್ರಸ್ತಾವನೆ ಮಂಡಿಸಿ, ಸರ್ಕಾರದಿಂದ ಶೀಘ್ರ ಅನುಮೋದನೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಶಾಸಕ ಕೆ. ನೇಮಿರಾಜನಾಯ್ಕ ಅವರು, ಹಂಪಾಪಟ್ಟಣದ ವಿದ್ಯಾರ್ಥಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರದ ಗಮನಕ್ಕೆ ವಿಷಯವನ್ನು ತಂದು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ ಕಾಲೇಜು ಮಂಜೂರು ಮಾಡಿಸಲು ಅಗತ್ಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪತ್ರಿ ಎಲ್ಲಪ್ಪ, ಉಪಾಧ್ಯಕ್ಷ ಟಿ. ಮಂಜುನಾಥ, ಗ್ರಾಮ ಪಂಚಾಯಿತಿ ಸದಸ್ಯರು, ವಿಎಸ್ಎಸ್ಎನ್ ಅಧ್ಯಕ್ಷ ಕೆ. ಹುಲುಗಪ್ಪ, ವಿವಿಧ ಮುಖಂಡರು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಹಾಗೂ ಪದವಿಪೂರ್ವ ಕಾಲೇಜು ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



