ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷರ ಹುದ್ದೆ ಸುಮಾರು ಎರಡು ವರ್ಷಗಳಿಂದ ಖಾಲಿ ಇರುವ ಹಿನ್ನೆಲೆಯಲ್ಲಿ, ಅರ್ಹ ಹಾಗೂ ಸಮರ್ಥ ವ್ಯಕ್ತಿಯನ್ನು ತಕ್ಷಣ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಜಿಲ್ಲಾಧ್ಯಕ್ಷ ಜಾಫರ್ ಡಾಲಾಯತ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವಕ್ಫ್ ಮಂಡಳಿಗೆ ಪೂರ್ಣ ಪ್ರಮಾಣದ ನಾಯಕತ್ವದ ಕೊರತೆಯಿಂದಾಗಿ ವಕ್ಫ್ ಆಸ್ತಿಗಳ ಸಂರಕ್ಷಣೆ, ನಿರ್ವಹಣೆ ಹಾಗೂ ಅಭಿವೃದ್ಧಿ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಗಳು ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ಆಸ್ತಿಗಳಾಗಿವೆ. ಅವುಗಳ ಸಮರ್ಪಕ ನಿರ್ವಹಣೆ ಮತ್ತು ಸಂರಕ್ಷಣೆಗೆ ಜವಾಬ್ದಾರಿಯುತ ನಾಯಕತ್ವ ಅಗತ್ಯವಿದೆ. ದಾಖಲೆಗಳ ನಿರ್ವಹಣೆ, ಆಸ್ತಿಗಳ ಸಂರಕ್ಷಣೆ, ಒತ್ತುವರಿ ತಡೆ ಹಾಗೂ ತೆರವು, ಅಭಿವೃದ್ಧಿ ಕಾರ್ಯಗಳು ಮತ್ತು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಮನವಿಗಳ ಕುರಿತು ಪರಿಣಾಮಕಾರಿ ಕ್ರಮ ಕೈಗೊಳ್ಳಲು ಅಧ್ಯಕ್ಷರ ನೇಮಕ ಅನಿವಾರ್ಯವಾಗಿದೆ ಎಂದು ಹೇಳಿದರು.
ರಿಯಾಜಹಮ್ಮದ್ ದೊಡ್ಡಮನಿ ಮಾತನಾಡಿ, ಅಧ್ಯಕ್ಷರ ನೇಮಕದ ಬಳಿಕ ಗದಗ ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಗಳ ಸಮಗ್ರ ಮಾಹಿತಿ ಹಾಗೂ ದಾಖಲೆಗಳನ್ನು ಪರಿಶೀಲಿಸಬೇಕು. ಅಕ್ರಮವಾಗಿ ಒತ್ತುವರಿ ಮಾಡಲಾಗಿರುವ ವಕ್ಫ್ ಆಸ್ತಿಗಳನ್ನು ಗುರುತಿಸಿ, ಕಾನೂನುಬದ್ಧವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಕ್ಫ್ ಆಸ್ತಿಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅವುಗಳಿಂದ ಸಮುದಾಯ ಹಾಗೂ ಸಾರ್ವಜನಿಕರಿಗೆ ದೊರೆಯಬೇಕಾದ ಪ್ರಯೋಜನಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಸೈಯದ್ ಜಹೀರುದ್ದೀನ್ ಪೀರಜಾದೆ, ಕುತ್ಬುದ್ದೀನ್ ಶೇಖ್, ಡಾ. ಅಬ್ದುಲ್ ರಜಾಕ್ ಮಂಗಳೂರು, ಮಹಬೂಬ್ ಭಾಷಾ ಖಾಜಿ, ನಿಜಾಮುದ್ದೀನ್ ಕಾಟಾಪುರ, ಮಹಮ್ಮದ್ ಸಲೀಂ ಕರಡಿ ಹಾಗೂ ರಿಯಾಜ್ ಅಹ್ಮದ್ ಈಟಿ ಇದ್ದರು.



