ವಿಜಯಸಾಕ್ಷಿ ಸುದ್ದಿ, ನರೇಗಲ್ಲ: “ಗುರು ಎಂದರೆ ಕೇವಲ ಪಾಠ ಬೋಧಿಸುವ ಶಿಕ್ಷಕರಲ್ಲ; ಅಜ್ಞಾನದಿಂದ ಜ್ಞಾನದತ್ತ ಕರೆದೊಯ್ಯುವ ದಾರಿದೀಪ. ವಿದ್ಯಾರ್ಥಿಗಳು ಗುರುಗಳ ಬಗ್ಗೆ ಗೌರವ, ಶಿಸ್ತು, ಸೇವಾಭಾವ ಹಾಗೂ ಉತ್ತಮ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ” ಎಂದು ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಶ್ರೀಗಳು ಹೇಳಿದರು.
ಸಮೀಪದ ನಿಡಗುಂದಿಕೊಪ್ಪದ ಚೆನ್ನಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಅತ್ಯುನ್ನತ ಮೌಲ್ಯಗಳಲ್ಲಿ ಒಂದಾಗಿದ್ದು, ಗುರುಗಳ ಮಾರ್ಗದರ್ಶನ ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಿದೆ ಎಂದರು.
ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರ, ಶಿಸ್ತು, ವಿನಯ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಸಮಾಜಕ್ಕೆ ಆದರ್ಶ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ಉತ್ತಮ ವ್ಯಕ್ತಿತ್ವ ನಿರ್ಮಾಣದಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೇದಮಂತ್ರಗಳ ಘೋಷ, ಪೂರ್ಣಕುಂಭ ಮತ್ತು ಪುಷ್ಪವೃಷ್ಟಿಯೊಂದಿಗೆ ಅಭಿನವ ಚನ್ನಬಸವ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಬಳಿಕ ಶ್ರೀಗಳ ಪಾದಪೂಜೆ ನೆರವೇರಿಸಿ ಪುಷ್ಪಾರ್ಚನೆ ಸಲ್ಲಿಸಿ ಆಶೀರ್ವಾದ ಪಡೆದರು.
ಬಳಿಕ ವಿದ್ಯಾರ್ಥಿಗಳು ಭಕ್ತಿಗೀತೆ, ವಚನಗಾಯನ, ಭಾಷಣ, ಸಮೂಹ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಗುರುಗಳ ಮಹತ್ವ, ಭಾರತೀಯ ಸಂಸ್ಕೃತಿ ಹಾಗೂ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಕಾರ್ಯಕ್ರಮಗಳು ನೆರೆದಿದ್ದವರ ಮೆಚ್ಚುಗೆಗೆ ಪಾತ್ರವಾದವು. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಗಳು ವಿಶೇಷ ಆಕರ್ಷಣೆಯಾಗಿದ್ದವು.
ಶಾಲೆಯ ಮುಖ್ಯ ಶಿಕ್ಷಕಿ ಜೆ.ಬಿ. ಹಿರೇಮಠ ಸ್ವಾಗತಿಸಿ ಮಾತನಾಡಿ, ಗುರುಪೂರ್ಣಿಮೆ ಕೇವಲ ಆಚರಣೆಯ ದಿನವಲ್ಲ, ಗುರುಗಳ ತ್ಯಾಗ, ಮಾರ್ಗದರ್ಶನ ಹಾಗೂ ಶಿಕ್ಷಣದ ಮಹತ್ವವನ್ನು ಸ್ಮರಿಸುವ ಪವಿತ್ರ ದಿನವಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಬದುಕನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಎಸ್.ಬಿ. ಅಣಗೌಡ್ರ ವಂದಿಸಿದರು.
ಕಾರ್ಯಕ್ರಮದಲ್ಲಿ ಆರ್.ಎಂ. ಬನ್ನಿಗೋಳ, ಆರ್.ಸಿ. ಶಾಂತಗಿರಿಮಠ, ಶಿವಪ್ಪ ಕೊಪ್ಪದ, ಧರ್ಮಪ್ಪ ಕೊಪ್ಪದ, ಪುಲಕೇಶಿ ಸರ್ವಿ, ಮಲ್ಲೇಶಪ್ಪ ಸರ್ವಿ, ಶರಣಪ್ಪ ನವಲಗುಂದ, ಕಲ್ಲಪ್ಪ ಅಣಗೌಡ್ರ, ಗಿರೀಶ್ ಕುಲಕರ್ಣಿ, ವೀರಮ್ಮ ಚಂಪನಗೌಡರ, ಅಮರಪ್ಪ ವಿವೇಕಿ, ತಾರಾನಾಥ ಮೇಟಿ, ವೇದಾ ಸರ್ವಿ, ಪ್ರವೀಣ ಮೇಟಿ ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
“ಗುರುಗಳ ಮಾರ್ಗದರ್ಶನವು ವಿದ್ಯಾರ್ಥಿಗಳ ಬದುಕಿಗೆ ದಿಕ್ಕು ತೋರಿಸುವ ಬೆಳಕಾಗಿದೆ. ಸಂಸ್ಕಾರ, ಶಿಸ್ತು ಮತ್ತು ಗುರುಭಕ್ತಿಯೊಂದಿಗೆ ಶಿಕ್ಷಣ ಪಡೆದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ.”
– ಅಭಿನವ ಚನ್ನಬಸವ ಶ್ರೀಗಳು



