ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಪಟ್ಟಣದ ವಾರ್ಡ್ ನಂ. 19ರಲ್ಲಿನ ರಸ್ತೆಯೊಂದನ್ನು ಕಳೆದ 2 ತಿಂಗಳ ಹಿಂದೆ ಕಿತ್ತು ಹಾಕಿದ್ದು, ಚೆನ್ನಾಗಿಯೇ ಇದ್ದ ಸಿ.ಸಿ ರಸ್ತೆಯನ್ನು ತೆಗೆದು ಮುಂದಿನ ಕಾಮಗಾರಿಯನ್ನು ಅರ್ಧಕ್ಕೇ ನಿಲ್ಲಿಸಿರುವದರಿಂದ ಅಲ್ಲಿನ ನಿವಾಸಿಗಳು ರಸ್ತೆಯಲ್ಲಿ ಓಡಾಡಲು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ವಾರ್ಡ್ನ ಸಾರ್ವಜನಿಕರು ಪ್ರತಿಭಟನೆ ನಡೆಸಿ ರಸ್ತೆಯ ಸ್ಥಿತಿಯ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದರು.
ಡಾಂಬರ್ ರಸ್ತೆ ಮಾಡುವ ಸಲುವಾಗಿ ಗಟ್ಟಿಮುಟ್ಟಾದ ಸಿಸಿ ರಸ್ತೆ ಕಿತ್ತು ಹಾಕಿ ಎರಡು ತಿಂಗಳಾದರೂ ಡಾಂಬರ್ ರಸ್ತೆ ಕಾಮಗಾರಿ ಆರಂಭವಾಗದೆ ಸಾರ್ವಜನಿಕರು ಪರದಾಡುವಂತಾಗಿದೆ. ಪಟ್ಟಣದ 19ನೇ ವಾರ್ಡಿನಲ್ಲಿ ಈಶ್ವರ ದೇವಸ್ಥಾನದ ಬಳಿ ನಗರೋತ್ಥಾನ ಕಾಮಗಾರಿಯ ನೆಪದಲ್ಲಿ ಗಟ್ಟಿಯಾದ ಸಿಸಿ ರಸ್ತೆ ತೆಗೆದು ತೆಗ್ಗು ತೆಗೆಯಲಾಗಿದ್ದು, ಸಂಚಾರಕ್ಕೆ ಸಂಚಕಾರವಾಗಿದೆ.
ಈ ವಾರ್ಡ್ನಲ್ಲಿ ನಗರೋತ್ಥಾನ ಕಾಮಗಾರಿ ಪ್ರಾರಂಭಿಸುವ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ರಸ್ತೆ ಅಗೆಯುವ ವೇಳೆ ಶೀಘ್ರದಲ್ಲಿ ಗುಣಮಟ್ಟದ ಡಾಂಬರ್ ರಸ್ತೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಕಳೆದ ಎರಡು ತಿಂಗಳಿAದ ಪುರಸಭೆ ಸದಸ್ಯರು ಇತ್ತ ಕಡೆ ಮುಖ ಹಾಕಿಲ್ಲ ಎಂದು ಬಸಾಪುರ ಓಣಿಯ ಬಸವ್ವ ನಿಂಗಪ್ಪ ಬಿಜಾಪೂರ ಆಕ್ರೋಶ ವ್ಯಕ್ತಪಡಿಸಿದರು.
ಪ್ರೇಮಾ ಬಳಗಾನೂರ ಮತ್ತು ನಿಂಗಪ್ಪ ರಾಮಗೇರಿ ಮಾತನಾಡಿ, ಕಳೆದ ಎರಡು ತಿಂಗಳಿಂದ ಈ ವಾರ್ಡಿನ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಎರಡು ಮೂರು ಬಾರಿ ಪುರಸಭೆಗೆ ಈ ಕುರಿತು ಮನವಿ ಸಲ್ಲಿಸಿದ್ದರೂ ಯಾರೂ ಕ್ಯಾರೇ ಎನ್ನುತ್ತಿಲ್ಲ. ಇನ್ನೊಂದು ವಾರದಲ್ಲಿ ರಸ್ತೆ ಕಾಮಗಾರಿ ಆರಂಭಿಸದಿದ್ದಲ್ಲಿ ಪುರಸಭೆಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಶಾಂತವ್ವ ಬಸಾಪೂರ, ನೀಲವ್ವ ಗೋಡಿ, ಕೆಂಚವ್ವ ಬಸಾಪೂರ, ಲಕ್ಷ್ಮವ್ವ ಬಸಾಪೂರ, ಷಣ್ಮುಖ ಬಡಿಗೇರ, ನಿಂಗಪ್ಪ ಗೋಡಿ ಮೊದಲಾದವರು ಇದ್ದರು.
ಪಟ್ಟಣದ 19ನೇ ವಾರ್ಡಿನಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಡಾಂಬರ್ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಇದ್ದ ರಸ್ತೆ ತೆಗೆದು ಹಾಕಲಾಗಿದೆ. ಸಾರ್ವಜನಿಕರಿಗೆ ಆಗಿರುವ ತೊಂದರೆ ಕುರಿತು ಮಾಹಿತಿ ಬಂದಿದೆ. ನಗರೋತ್ಥಾನ ಕಾಮಗಾರಿಯ ಸಂಪೂರ್ಣ ಜವಾಬ್ದಾರಿ ಜಿಲ್ಲಾಧಿಕಾರಿಗಳ ಅಧೀನದಲ್ಲಿ ಇರುತ್ತದೆ. ನಮ್ಮದು ಕೇವಲ ಉಸ್ತುವಾರಿ ಮಾಡುವ ಕಾರ್ಯವಾಗಿದೆ. ಗುತ್ತಿಗೆದಾರರಿಗೆ ನೋಟಿಸ್ ನೀಡಲಾಗಿದ್ದು, ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಕಾರ್ಯ ಮಾಡಲಾಗುವದು.
– ಮಹೇಶ ಹಡಪದ.
ಪುರಸಭೆ ಮುಖ್ಯಾಧಿಕಾರಿ.



