ಬೆಂಗಳೂರು: ರಾಜ್ಯದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂದು ಮಾನದಂಡಗಳ ಆಧಾರದ ಮೇಲೆ ಗುರುತಿಸಲಾಗಿದೆ. ಈ ಕುರಿತು ಸಂಪೂರ್ಣ ವರದಿಯನ್ನು ಈ ತಿಂಗಳ ಅಂತ್ಯದೊಳಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಬರ ಪರಿಸ್ಥಿತಿಯ ಬಗ್ಗೆಯೂ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬರ ಘೋಷಣೆಯ ನಿಯಮಗಳ ಪ್ರಕಾರ ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಬಹುದು ಎಂದು ಹೇಳಿದರು.
ಮಾನದಂಡಗಳ ಪ್ರಕಾರ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದ್ದು, ಈಗಾಗಲೇ ನಡೆಸಿರುವ ಗ್ರೌಂಡ್ ಟ್ರೂಥಿಂಗ್ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಈ ಕುರಿತು ಪ್ರತಿ ವಾರವೂ ಪರಿಶೀಲನೆ ನಡೆಸಲಾಗುತ್ತದೆ. ತಿಂಗಳಾಂತ್ಯಕ್ಕೆ ಸಂಪೂರ್ಣ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪ್ರತಿನಿತ್ಯ ಹಲವು ಶಾಸಕರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಇಂದು ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಶಾಸಕರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಪರಮೇಶ್ವರ್ ಹೇಳಿದರು.
ಬ್ಯಾಚ್-ಟು-ಬ್ಯಾಚ್ ಮಾದರಿಯಲ್ಲಿ ಸಂಜೆವರೆಗೆ ಶಾಸಕರೊಂದಿಗೆ ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿ ಮುಖ್ಯಮಂತ್ರಿ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಆಡಳಿತ ಪಕ್ಷವಾಗಿ ನಾವು ಒಗ್ಗಟ್ಟಾಗಿ ಇರಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದಾಗ ಆಡಳಿತ ಪಕ್ಷದ ಶಾಸಕರಿಗೆ ಹೆಚ್ಚಿನ ಒತ್ತು ನೀಡುವುದು ಸಹಜ. ಅದೇ ರೀತಿ ನಮ್ಮ ಸರ್ಕಾರವೂ ಶಾಸಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡುತ್ತಿದೆ ಎಂದು ಜಿ. ಪರಮೇಶ್ವರ್ ಹೇಳಿದರು.
ಜನರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಆಡಳಿತ ಪಕ್ಷ ತಮ್ಮ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ನಿರೀಕ್ಷೆ ಜನರಲ್ಲಿರುತ್ತದೆ. ಹೀಗಾಗಿ ಆಡಳಿತ ಪಕ್ಷದ ಶಾಸಕರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಅವರು ತಿಳಿಸಿದರು.



