HomeGadag Newsವ್ಯಸನಿಗಳ ಮನಃಪರಿವರ್ತನೆಗೆ ಶ್ರಮಿಸಿ : ಎಸ್.ವಿ. ಸಂಕನೂರ

ವ್ಯಸನಿಗಳ ಮನಃಪರಿವರ್ತನೆಗೆ ಶ್ರಮಿಸಿ : ಎಸ್.ವಿ. ಸಂಕನೂರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ವ್ಯಸನಮುಕ್ತ ಸಮಾಜ ಅನಿವಾರ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ಜರುಗಿದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.

``Drug Free Day'' program

ಡಾ.ಮಹಾಂತ ಶಿವಯೋಗಿಗಳ ಜನ್ಮದಿನವನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತೇವೆ. ಶ್ರೀಗಳು ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ವ್ಯಸನಗಳು, ದುಶ್ಚಟಗಳು ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನ ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದರು. ಮಹಾಂತ ಸ್ವಾಮಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರಲ್ಲದೆ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಎಂದು ತಿಳಿಸಿದರು.

ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ, ನಿಸರ್ಗ ಚಿಕಿತ್ಸೆ-ಯೋಗ ಕೇಂದ್ರ ಸ್ಥಾಪಿಸಿದ ಜೊತೆಗೆ ಶಾಖಾ ಮಠಗಳಿಗೆ ಪ.ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದರು ಎಂದು ಹೇಳಿದರು.

ಆಧುನಿಕ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆ ಫ್ಯಾಷನ್ ಆಗಿದ್ದು, ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಸೇರಿದಂತೆ ಯುವಜನತೆ ಡ್ರಗ್ಸ್ ಬಳಸುತ್ತಿರುವುದು ಆಘಾತಕಾರಿ. ಇದರಿಂದ ವ್ಯಸನಿಗಳ ವಯಕ್ತಿಕ ಜೀವನ ಸೇರಿದಂತೆ ದೇಶದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ದೇಶದ ನಿಜವಾದ ಆಸ್ತಿಯಾದ ಯುವಜನರಿಗೆ ದೇಶ ಕಟ್ಟಿ ಬೆಳೆಸುವ ಜವಬ್ದಾರಿಯಿದೆ. ಈಗಾಗಲೇ ವ್ಯಸನಮುಕ್ತಗೊಳಿಸಲು ಹಲವಾರು ಕಾನೂನುಗಳು ಜಾರಿಯಲ್ಲಿವೆ. ಕಾನೂನುಬಾಹಿರವಾಗಿ ಮಾದಕ ವಸ್ತುಗಳ ಸರಬರಾಜನ್ನು ನಿಯಂತ್ರಿಸಿ ಶಿಕ್ಷಿಸುವುದರಿಂದ ವ್ಯಸನಿಗಳು ಕಡಿಮೆಯಾಗುವಿದಿಲ್ಲ. ವ್ಯಸನಿಗಳ ಮನಃಪರಿವರ್ತನೆ ಮಾಡಲು ಪಾಲಕರು, ಸ್ನೇಹಿತರು ಸೇರಿದಂತೆ ಎಲ್ಲರೂ ಶ್ರಮಿಸಿದಾಗ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ವ್ಯಸನಮುಕ್ತ ಸಮಾಜ ನಿರ್ಮಿಸಲು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ವಾರ್ತಾಧಿಕಾರಿ ವಸಂತ ಮಡ್ಲೂರ, ಶಿರಸ್ತೇದಾರ ಎಸ್.ಎಂ. ಹಿರೇಮಠ, ವಿದ್ಯಾರ್ಥಿಗಳು ಹಾಜರಿದ್ದರು. ಎಸ್.ಎಸ್. ಗೌಡರ ಕಾರ್ಯಕ್ರಮ ನಿರ್ವಹಿಸಿದರು.

ಸಂಪನ್ಮೂನ ವ್ಯಕ್ತಿ ಮತ್ತು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಅರವಿಂದ ಕರಿನಾಗಣ್ಣನವರ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ತಿಳಿಸುತ್ತ, ವಿದ್ಯಾರ್ಥಿಗಳು ಕುತೂಹಲದಿಂದ ಮಾದಕ ವ್ಯಸನ ಪ್ರಾರಂಭಿಸಿ ಅದರಿಂದ ಹೊರಬರದಂತೆ ಅದಕ್ಕೆ ದಾಸರಾಗುತ್ತಾರೆ. ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಜೀವನದಲ್ಲಿ ಸಫಲರಾಗಬೇಕೆಂದು ವಿವರಿಸಿದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img