ಮುಂಬೈ: ಇ20 ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ನಾಲ್ವರು ಯೂಟ್ಯೂಬರ್ಗಳ ವಿರುದ್ಧ ನಾಗ್ಪುರ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಬುರ್ಗಿ ಜೈಲಿನಿಂದ ಎಸ್ಕೇಪ್ ಆಗಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್! ಇನ್ನಿಬ್ಬರಿಗಾಗಿ ಶೋಧ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅವರ ಪ್ರತಿಷ್ಠೆಗೆ ಧಕ್ಕೆ ತರಲು ಯತ್ನಿಸಲಾಗಿದೆ ಎಂಬ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ.
ನಾಗ್ಪುರದ ಬಿಜೆಪಿ ಸೋಶಿಯಲ್ ಮೀಡಿಯಾ ಸೆಲ್ ಅಧ್ಯಕ್ಷ ಶಿಶಿರ್ ತ್ರಿಪಾಠಿ ನೀಡಿದ ದೂರಿನ ಆಧಾರದ ಮೇಲೆ ಬಿಹಾರದ ಯೂಟ್ಯೂಬರ್ ಮನೀಶ್ ಕಶ್ಯಪ್, ದೇಸಿ ಬಾಯ್ಸ್, ಹರ್ಷಿತ್ ರಾಠಿ ಹಾಗೂ ಅಂಕಲೇಶ್ ಇನ್ವಾತೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಇ20 ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಇಂಜಿನ್ ಹಾಳಾಗುತ್ತಿದೆ ಎಂಬ ಚರ್ಚೆಗಳು ಇತ್ತೀಚೆಗೆ ಜೋರಾಗಿದ್ದವು. ಇದೇ ವೇಳೆ ಯೂಟ್ಯೂಬರ್ ಮನೀಶ್ ಕಶ್ಯಪ್ ಅವರು ತಮ್ಮ ಟೊಯೋಟಾ ಕಾರಿನ ಇಂಜಿನ್ ಎಥೆನಾಲ್ ಮಿಶ್ರಿತ ಪೆಟ್ರೋಲ್ನಿಂದ ಹಾಳಾಗಿದೆ ಎಂದು ಆರೋಪಿಸಿ ಪೆಟ್ರೋಲ್ ಪಂಪ್ನಲ್ಲಿ ಗಲಾಟೆ ನಡೆಸಿದ ವಿಡಿಯೋ ವೈರಲ್ ಆಗಿತ್ತು.
ಈ ವಿಡಿಯೋಗಳು ಸಾರ್ವಜನಿಕರಲ್ಲಿ ಗೊಂದಲ ಮತ್ತು ತಪ್ಪು ಮಾಹಿತಿ ಮೂಡಿಸುತ್ತಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಎಥೆನಾಲ್ ನೀತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ನೀತಿಯನ್ನು ತಪ್ಪಾಗಿ ಬಿಂಬಿಸಲಾಗಿದೆ ಹಾಗೂ ಸಚಿವ ನಿತಿನ್ ಗಡ್ಕರಿ ಅವರ ಹೆಸರನ್ನು ಅನಗತ್ಯವಾಗಿ ಜೋಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇನ್ನೊಂದೆಡೆ ಟೊಯೋಟಾ ಕಂಪನಿಯ ತಜ್ಞರ ತಂಡವು ಮನೀಶ್ ಕಶ್ಯಪ್ ಅವರ ವಾಹನವನ್ನು ಪರಿಶೀಲಿಸಿದ್ದು, ಎಥೆನಾಲ್ನಿಂದ ಇಂಜಿನ್ ಹಾಳಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯವಿಲ್ಲ ಎಂದು ತಿಳಿಸಿದೆ. ಈ ಸಂಬಂಧ ಕಂಪನಿಯೂ ದೂರು ನೀಡಿದೆ.
ಆರೋಪಗಳನ್ನು ತಳ್ಳಿಹಾಕಿರುವ ಸಚಿವ ನಿತಿನ್ ಗಡ್ಕರಿ, “ಎಥೆನಾಲ್ ಮಿಶ್ರಿತ ಪೆಟ್ರೋಲ್ನಿಂದ ಒಂದೇ ಒಂದು ವಾಹನದ ಇಂಜಿನ್ ಹಾಳಾಗಿದೆ ಎಂಬುದನ್ನು ಸಾಬೀತುಪಡಿಸಿ” ಎಂದು ಸವಾಲು ಹಾಕಿದ್ದಾರೆ.
ಈ ಪ್ರಕರಣದಲ್ಲಿ ವಿಡಿಯೋಗಳಲ್ಲಿ ಸಚಿವರ ಹೆಸರನ್ನು ಬಳಸಲಾಗಿದೆ ಹೊರತು, ನಿತಿನ್ ಗಡ್ಕರಿ ಅವರಿಗೆ ನೇರ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.



