ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಇದೀಗ ದಾಳಿ ಕುರಿತು ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾದ ಹಲವು ಅಂಶಗಳ ಬಗ್ಗೆ ಮಾಹಿತಿ ನೀಡಿದೆ.
ಇಡಿ ಪ್ರಕಟಣೆ ಪ್ರಕಾರ, ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ಅವರ ಪುತ್ರಿ ಪ್ರಿಯಾಂಕಾ, ಪುತ್ರ ರಾಹುಲ್ ಹಾಗೂ ಅಳಿಯ ವೈ.ಡಿ. ಮಂಜುನಾಥ್ ಸೇರಿದಂತೆ ಆಪ್ತರಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳ ಮೇಲೆ ಶೋಧ ನಡೆಸಲಾಗಿದೆ. ಬೆಂಗಳೂರು, ಬೆಳಗಾವಿ, ಗೋಕಾಕ ಹಾಗೂ ಕೋಲ್ಕತ್ತಾದ ವಿವಿಧ ಸ್ಥಳಗಳು ಸೇರಿದಂತೆ ಒಟ್ಟು 21 ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ.
ಶೋಧ ಕಾರ್ಯಾಚರಣೆಯಲ್ಲಿ ವಿದೇಶಿ ಹೂಡಿಕೆ ಹಾಗೂ ಗಡಿಯಾಚೆಗಿನ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ ಎನ್ನಲಾಗಿದೆ. ವಿದೇಶಿ ಸಂಸ್ಥೆಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನೂ ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.
ಇನ್ನು ದಾಳಿ ವೇಳೆ ಲೆಕ್ಕಕ್ಕೆ ತೋರಿಸದ ₹3.3 ಕೋಟಿ ನಗದು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿದೆ. ಇದರ ಜೊತೆಗೆ ಸುಮಾರು ₹15 ಲಕ್ಷ ಮೌಲ್ಯದ ಡಾಲರ್, ಯುರೋ ಸೇರಿದಂತೆ ವಿದೇಶಿ ಕರೆನ್ಸಿ ಕೂಡ ಪತ್ತೆಯಾಗಿದ್ದು, ಅದನ್ನೂ ಸೀಜ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಣಿಗಾರಿಕೆ ಹೂಡಿಕೆ ಕುರಿತು ದಾಖಲೆ ಪರಿಶೀಲನೆ:
ಕಾಂಗೋದಲ್ಲಿರುವ ಗಣಿಗಾರಿಕೆ ಸಂಸ್ಥೆಗೆ ಸಂಬಂಧಿಸಿದ ಹೂಡಿಕೆ ಹಾಗೂ ಪಾಲುದಾರಿಕೆ ಕುರಿತು ದಾಖಲೆಗಳು ಪತ್ತೆಯಾಗಿವೆ ಎಂದು ಇಡಿ ತಿಳಿಸಿದೆ. ಚಿನ್ನದ ಗಣಿಗಾರಿಕೆಯಲ್ಲಿ ಶೇ.40ರಷ್ಟು ಪಾಲು ಹೊಂದಿರುವುದಕ್ಕೆ ಸಂಬಂಧಿಸಿದ ಮಾಹಿತಿಯೂ ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಈ ವಿದೇಶಿ ಹೂಡಿಕೆಗಳು, ಹಣಕಾಸು ವಹಿವಾಟುಗಳು ಹಾಗೂ ಸಂಬಂಧಿತ ದಾಖಲೆಗಳ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇಡಿ ತಿಳಿಸಿದೆ.
ಇನ್ನು ದಾಳಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿನ ಅಕ್ರಮಗಳು ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳು ಪತ್ತೆಯಾಗಿವೆ ಎಂದು ಇಡಿ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ದಾಖಲೆಗಳು ಹಾಗೂ ಡಿಜಿಟಲ್ ಸಾಧನಗಳಲ್ಲಿರುವ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಅವುಗಳ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ ಎನ್ನಲಾಗಿದೆ.
ಇಡಿ ದಾಳಿಯ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲೂ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ವಿದೇಶಿ ಹೂಡಿಕೆ ಸೇರಿದಂತೆ ವಿವಿಧ ಹಣಕಾಸು ವ್ಯವಹಾರಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ನಾಯಕರು ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರಿಗೆ ರಾಜಕೀಯವಾಗಿ ಬೆಳೆಯುವ ಅವಕಾಶವಿರುವ ಹಿನ್ನೆಲೆಯಲ್ಲಿ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂಬ ಆರೋಪವನ್ನೂ ಅವರ ಬೆಂಬಲಿಗರು ಮಾಡಿದ್ದಾರೆ. ಆದರೆ ಈ ಆರೋಪಗಳನ್ನು ಬಿಜೆಪಿ ಹಾಗೂ ಇಡಿ ತಳ್ಳಿಹಾಕಿರುವುದಾಗಿ ವರದಿಯಾಗಿದೆ.
ಇದೀಗ ಲೋಕೋಪಯೋಗಿ ಇಲಾಖೆಯಲ್ಲಿನ ಅಕ್ರಮ ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ಇಡಿ ಅಧಿಕೃತವಾಗಿ ತಿಳಿಸಿರುವುದು ಪ್ರಕರಣಕ್ಕೆ ಮತ್ತೊಂದು ಆಯಾಮ ನೀಡಿದೆ.
ಒಟ್ಟಾರೆ, ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರಿಗೆ ಸಂಬಂಧಿಸಿದ 21 ಸ್ಥಳಗಳಲ್ಲಿ ನಡೆದ ಇಡಿ ಶೋಧ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ, ವಿದೇಶಿ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಡಿಜಿಟಲ್ ಸಾಧನಗಳು ಪತ್ತೆಯಾಗಿರುವುದಾಗಿ ಇಡಿ ತಿಳಿಸಿದೆ. ಇದೀಗ ಈ ದಾಖಲೆಗಳ ಆಧಾರದ ಮೇಲೆ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.



