ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭವಿಷ್ಯದಲ್ಲಿ INDIA ಮೈತ್ರಿಕೂಟಕ್ಕೆ ಸೇರುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯ್ ನೇತೃತ್ವದ TVK ಪಕ್ಷವನ್ನು ಕೂಡ INDIA ಒಕ್ಕೂಟಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಬೇಕು ಎಂಬುದು ತಮ್ಮ ಆಸೆಯಾಗಿದೆ ಎಂದು ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ಕೆಲ ಅಸಮಾಧಾನ ವ್ಯಕ್ತಪಡಿಸಿದ್ದರೂ, INDIA ಕೂಟದ ಬಗ್ಗೆ ನಕಾರಾತ್ಮಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಆದ್ದರಿಂದ ಸ್ಟಾಲಿನ್ ಮೈತ್ರಿಯಲ್ಲೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ರಾಜ್ಯ ಮಟ್ಟದಲ್ಲಿ ಪಕ್ಷಗಳು ಪರಸ್ಪರ ಎದುರಾಳಿಗಳಾಗಿದ್ದರೂ, ರಾಷ್ಟ್ರ ಮಟ್ಟದಲ್ಲಿ INDIA ಮೈತ್ರಿಕೂಟದಲ್ಲಿ ಒಟ್ಟಾಗಿ ಕೆಲಸ ಮಾಡಬಹುದು ಎಂದು ಚಿದಂಬರಂ ಅಭಿಪ್ರಾಯಪಟ್ಟರು. ಇದಕ್ಕೆ ಕೇರಳದ ಸಿಪಿಎಂ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಉದಾಹರಣೆಗಳಾಗಿವೆ ಎಂದು ಅವರು ಉಲ್ಲೇಖಿಸಿದರು.



