ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಣ್ಣಿನ ಫಲವತ್ತತೆ ಕಾಪಾಡಲು ರೈತರು ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಆದ್ಯತೆ ನೀಡಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಹೇಳಿದರು.
ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ‘ಭೂಮಿ ಬಚಾವೋ’ ಹಾಗೂ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗುತ್ತಿರುವುದು ಮಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರೈತರು ತಮ್ಮ ಜಮೀನಿನ ಒಂದು ಭಾಗವನ್ನಾದರೂ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಮೀಸಲಿಟ್ಟು ಪ್ರಯೋಗಾತ್ಮಕವಾಗಿ ಕೃಷಿ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ದ್ವಿದಳ ಧಾನ್ಯಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದ್ದು, ರೈತರು ಹೆಸರು, ತೊಗರಿ, ಉದ್ದು ಸೇರಿದಂತೆ ದ್ವಿದಳ ಧಾನ್ಯಗಳ ಬೆಳೆಗೆ ಒತ್ತು ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು ಎಂದರು.
ಪ್ರತಿ ವರ್ಷ ಮಣ್ಣಿನ ಪರೀಕ್ಷೆ ಮಾಡಿಸಿ ಅದರ ವರದಿ ಆಧರಿಸಿ ಗೊಬ್ಬರ ಮತ್ತು ಬೆಳೆ ಆಯ್ಕೆ ಮಾಡಿದರೆ ಕೃಷಿಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಇಲಾಖೆಯ ಉಪನಿರ್ದೇಶಕಿ ಸ್ಫೂರ್ತಿ ಜಿ.ಎಸ್., ರೈತರು ಅಗತ್ಯಕ್ಕಿಂತ ಹೆಚ್ಚು ರಾಸಾಯನಿಕ ಗೊಬ್ಬರ ಬಳಕೆ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮಣ್ಣಿನ ಸತ್ವ ಕಾಪಾಡಲು ಸಮತೋಲಿತ ಗೊಬ್ಬರ ಬಳಕೆ ಅಗತ್ಯ ಎಂದರು.
ಇಫ್ಕೋ ಕಂಪನಿಯ ಕ್ಷೇತ್ರ ಅಧಿಕಾರಿ ಯಕ್ಷಿತ್ ಡಿ.ಎಸ್., ವಿಜ್ಞಾನಿಗಳಾದ ಚೇತನ್ ಬಾಬು, ವಿನಾಯಕ ನಿರಂಜನ ಹಾಗೂ ಸುಧಾ ಮಂಕಣಿ ರೈತರಿಗೆ ಕೃಷಿ ತಂತ್ರಜ್ಞಾನ ಮತ್ತು ಮಣ್ಣಿನ ಆರೋಗ್ಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ ಕಾಶಪ್ಪನವರ, ಬಸವರಾಜ ಇಟಗಿ, ಶಂಕ್ರಣ್ಣ ಶಿರನಹಳ್ಳಿ, ಶಶಿಕಲಾ ಸಾಸಲವಾಡ, ಪ್ರಕಾಶ ಕಳ್ಳಿಹಾಳ, ಚನ್ನಪ್ಪ ಶಿರನಹಳ್ಳಿ, ಚಂದ್ರಶೇಖರ ಮೂಲಿಮನಿ ಸೇರಿದಂತೆ ರೈತರು ಭಾಗವಹಿಸಿದ್ದರು.



