ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ರೈತರು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ರಸಗೊಬ್ಬರಗಳನ್ನು ವೈಜ್ಞಾನಿಕ ರೀತಿಯಲ್ಲಿ ಹಾಗೂ ಶಿಫಾರಸು ಮಾಡಿದ ಪ್ರಮಾಣದಲ್ಲಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಯೂರಿಯಾ ಬಳಕೆ ಶಿಫಾರಸು ಪ್ರಮಾಣಕ್ಕಿಂತ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಮಣ್ಣಿನ ಫಲವತ್ತತೆ ಕುಸಿತ, ಪೋಷಕಾಂಶಗಳ ಅಸಮತೋಲನ, ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳ ಹಾಗೂ ಪರಿಸರ ಮಾಲಿನ್ಯದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಆದ್ದರಿಂದ ರೈತರು ಮಣ್ಣಿನ ಪರೀಕ್ಷೆ ಆಧಾರಿತ ಪೋಷಕಾಂಶ ನಿರ್ವಹಣೆಯನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.
ಮಣ್ಣಿನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗೋಮಯ ಗೊಬ್ಬರ, ಕಾಂಪೋಸ್ಟ್, ವರ್ಮಿ ಕಾಂಪೋಸ್ಟ್, ಹಸಿರು ಗೊಬ್ಬರ, ಜೈವಿಕ ಗೊಬ್ಬರ ಹಾಗೂ ಬೆಳೆ ಅವಶೇಷಗಳಿಂದ ತಯಾರಿಸಲಾದ ಸಾವಯವ ಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ.
ಸಾವಯವ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಸಾವಯವ ಇಂಗಾಲದ ಪ್ರಮಾಣ ಹೆಚ್ಚಾಗಿ, ಮಣ್ಣಿನ ರಚನೆ, ನೀರು ಹಿಡಿದಿಡುವ ಸಾಮರ್ಥ್ಯ ಹಾಗೂ ಸೂಕ್ಷ್ಮಜೀವಿಗಳ ಚಟುವಟಿಕೆ ಉತ್ತಮಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ರೈತರು “ಸರಿಯಾದ ಗೊಬ್ಬರ, ಸರಿಯಾದ ಪ್ರಮಾಣ, ಸರಿಯಾದ ಸಮಯ ಹಾಗೂ ಸರಿಯಾದ ವಿಧಾನ” ಎಂಬ ತತ್ವದ ಅನುಸರಣೆಯಿಂದ ಗೊಬ್ಬರ ಬಳಕೆಯ ದಕ್ಷತೆ ಹೆಚ್ಚುವುದರ ಜೊತೆಗೆ ಉತ್ಪಾದನಾ ವೆಚ್ಚವೂ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ನ್ಯಾನೋ ಯೂರಿಯಾ ಬಳಕೆಯನ್ನು ಉತ್ತೇಜಿಸಲಾಗುತ್ತಿದ್ದು, ಇದರ ಬಳಕೆಯಿಂದ ಸಸ್ಯಗಳಿಗೆ ಸಾರಜನಕ ಪೋಷಕಾಂಶ ಪರಿಣಾಮಕಾರಿಯಾಗಿ ದೊರೆಯುತ್ತದೆ. ರಾಸಾಯನಿಕ ಯೂರಿಯಾ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜೊತೆಗೆ ಗೊಬ್ಬರ ಬಳಕೆಯ ದಕ್ಷತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೃಷಿ ಇಲಾಖೆಯ ಶಿಫಾರಸಿನಂತೆ ನ್ಯಾನೋ ಯೂರಿಯಾವನ್ನು ಬಳಸುವಂತೆ ರೈತರಿಗೆ ಸಲಹೆ ನೀಡಲಾಗಿದೆ.
ಬೆಳೆವಾರು ಶಿಫಾರಸು ಮಾಡಿದ ಪ್ರಮಾಣದಲ್ಲಿ ಮಾತ್ರ ಗೊಬ್ಬರ ಬಳಸಬೇಕು. ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರ ಹಾಗೂ ಜೈವಿಕ ಗೊಬ್ಬರಗಳ ಸಮಗ್ರ ಬಳಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.
ಕೃಷಿ ಇಲಾಖೆ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ತಾಂತ್ರಿಕ ಸಲಹೆಗಳನ್ನು ಪಡೆದು ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಲಭ್ಯವಾಗುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಜಿಲ್ಲೆಯ ಸಮಸ್ತ ರೈತರು ಸಮತೋಲಿತ ರಸಗೊಬ್ಬರ ಬಳಕೆ, ಸಾವಯವ ಕೃಷಿ ಪದ್ಧತಿಗಳ ಅಳವಡಿಕೆ ಹಾಗೂ ನ್ಯಾನೋ ಯೂರಿಯಾ ಬಳಕೆಯ ಮೂಲಕ ಮಣ್ಣಿನ ಆರೋಗ್ಯವನ್ನು ಕಾಪಾಡಿ ಸುಸ್ಥಿರ ಕೃಷಿಯತ್ತ ಹೆಜ್ಜೆ ಇಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದ್ದಾರೆ.
“ಮಣ್ಣಿನ ಆರೋಗ್ಯವೇ ಕೃಷಿಯ ಆಧಾರ… ಸಮತೋಲಿತ ಗೊಬ್ಬರ ಬಳಕೆ ನಮ್ಮ ಜವಾಬ್ದಾರಿ”
ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ
ಕಾಳಸಂತೆ ಕಂಡರೆ ಮಾಹಿತಿ ನೀಡಿ
ಕಾಳಸಂತೆ, ಅಕ್ರಮ ಸಂಗ್ರಹಣೆ ಅಥವಾ ಅಧಿಕ ದರದಲ್ಲಿ ಗೊಬ್ಬರ ಮಾರಾಟದಂತಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಕೃಷಿ ಇಲಾಖೆ ಅಥವಾ ಜಿಲ್ಲಾ ಆಡಳಿತದ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.



