ಅಬುಧಾಬಿ/ಬೆಂಗಳೂರು: ಇರಾನ್–ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಮಗಳ ಹುಟ್ಟುಹಬ್ಬ ಆಚರಣೆಗೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ.
ರಣ್ ಮತ್ತು ಸುನೀತ ದಂಪತಿ ಫೆಬ್ರವರಿ 23ರಂದು ಮಗಳ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಬೆಂಗಳೂರಿನಿಂದ ದುಬೈಗೆ ಪ್ರಯಾಣ ಬೆಳೆಸಿದ್ದರು. ದುಬೈಯಲ್ಲಿರುವ ಬುರ್ಜ್ ಖಲೀಫಾ ಎದುರು ಮಗಳ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದರು.
ಶನಿವಾರ ಬೆಂಗಳೂರಿಗೆ ಮರಳಲು ಟಿಕೆಟ್ ಕಾಯ್ದಿರಿಸಲಾಗಿದ್ದು, ಮಧ್ಯಾಹ್ನ ಅಬುಧಾಬಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರವೇಶ ಪ್ರಕ್ರಿಯೆ ಕೂಡ ಪೂರ್ಣಗೊಳಿಸಿದ್ದರು. ಆದರೆ ಅಷ್ಟರಲ್ಲಿ ಕ್ಷಿಪಣಿ ದಾಳಿ ಆರಂಭವಾದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡು ದಂಪತಿ ಅಲ್ಲಿಯೇ ಸಿಲುಕಿದ್ದಾರೆ. ಸುರಕ್ಷಿತವಾಗಿ ನಮ್ಮ ನಾಡಿಗೆ ಮರಳಿದರೆ ಸಾಕು ಎಂಬ ಭಯದೊಂದಿಗೆ ಪ್ರತಿಕ್ಷಣ ಕಳೆಯುತ್ತಿರುವುದಾಗಿ ದಂಪತಿ ನೋವು ವ್ಯಕ್ತಪಡಿಸಿದ್ದಾರೆ.
ಸುನೀತ ಅವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರ ಶೀಘ್ರ ಕ್ರಮ ಕೈಗೊಂಡು ನಮ್ಮನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ದಂಪತಿ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲೇ ಒಂದು ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಳಿಕ ಅಲ್ಲಿನ ಅಧಿಕಾರಿಗಳು ಅವರನ್ನು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಆದರೂ ಯುದ್ಧದ ಆತಂಕದ ನಡುವೆ ಹೋಟೆಲ್ನಲ್ಲೇ ಆಶ್ರಯ ಪಡೆದಿರುವ ದಂಪತಿ, ಭಯಭೀತ ವಾತಾವರಣದಲ್ಲಿ ದಿನಗಳನ್ನು ಕಳೆಯುತ್ತಿದ್ದಾರೆ.



