ವಿಜಯಸಾಕ್ಷಿ ಸುದ್ದಿ, ಗದಗ: ಜನಪದ ಸಾಹಿತ್ಯವು ಕನ್ನಡ ಸಂಸ್ಕೃತಿಯ ಜೀವಂತ ಆಕರವಾಗಿದ್ದು, ಜಾನಪದ ಹಾಡುಗಳು ಜನಸಾಮಾನ್ಯರ ಬದುಕಿನ ಭಾವನೆ, ಅನುಭವ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೀವನಾಡಿಯಾಗಿವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಲಿಂಗಾಯತ ಪ್ರಗತಿಶೀಲ ಸಂಘದ 2802ನೇ ಶಿವಾನುಭವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಗ್ರಾಮೀಣ ಜನರು ತಮ್ಮ ಕಾಯಕ, ಸುಖ-ದುಃಖ ಹಾಗೂ ಬದುಕಿನ ವಿವಿಧ ಅನುಭವಗಳನ್ನು ಜಾನಪದ ಹಾಡುಗಳ ಮೂಲಕ ಅಭಿವ್ಯಕ್ತಿಪಡಿಸುತ್ತಿದ್ದರು. ಯಾವುದೇ ಪದವಿ ಅಥವಾ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ತಮ್ಮ ಆಶು ಕವಿತ್ವದ ಮೂಲಕ ಅಮೂಲ್ಯ ಸಾಹಿತ್ಯವನ್ನು ಸೃಷ್ಟಿಸಿದ್ದಾರೆ ಎಂದು ಹೇಳಿದರು.
ಜನಪದ ಕೋಗಿಲೆ ಗೌರಮ್ಮ ಚಲವಾದಿ ಅವರ ಕಥೆಗಳು ಅಪಾರ ಮೌಲಿಕತೆಯನ್ನು ಹೊಂದಿದ್ದು, ಅವುಗಳನ್ನು ಇಂಗ್ಲಿಷ್ಗೆ ಅನುವಾದಿಸಿದರೆ ವಿಶ್ವಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುವಷ್ಟು ಆಳವಾದ ವಿಚಾರಗಳನ್ನು ಒಳಗೊಂಡಿವೆ ಎಂದು ಅಭಿಪ್ರಾಯಪಟ್ಟರು.
‘ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ವಿಷಯದ ಕುರಿತು ಉಪನ್ಯಾಸ ನೀಡಿದ ಕುಷ್ಟಗಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜೀವನಸಾಬ್ ಮಾ. ವಾಲಿಕಾರ, ಜನಪದರು ಸಂಸ್ಕೃತಿಯ ರಾಯಭಾರಿಗಳಾಗಿದ್ದು, ಸಮಾಜದಲ್ಲಿ ಸಮಷ್ಟಿ ಹಿತದ ಬದುಕಿಗೆ ಪ್ರೇರಣೆಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಮಾಜಿ ಅಧ್ಯಕ್ಷ ಈಶ್ವರಪ್ಪ ಮುನವಳ್ಳಿ ದಂಪತಿಗಳನ್ನು ಸನ್ಮಾನಿಸಲಾಯಿತು. ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತಿರುಪತಿ ಶಿವನಗುತ್ತಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಚನ ಸಂಗೀತ, ಧರ್ಮಗ್ರಂಥ ಪಠಣ ಹಾಗೂ ವಚನ ಚಿಂತನ ಕಾರ್ಯಕ್ರಮಗಳು ಜರುಗಿದವು. ಸಂಘದ ಪದಾಧಿಕಾರಿಗಳು, ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.
ಕೋಟ್
“ಜನಪದ ಸಾಹಿತ್ಯವು ಕೇವಲ ಹಾಡು ಅಥವಾ ಕಥೆಗಳ ಸಂಗ್ರಹವಲ್ಲ; ಅದು ಕನ್ನಡಿಗರ ಬದುಕು, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಅಮೂಲ್ಯ ಪರಂಪರೆಯಾಗಿದೆ.”
ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು



