ಬಾಗಲಕೋಟೆ: ತರಗತಿ ನಡೆಯುತ್ತಿದ್ದ ವೇಳೆ ಸರ್ಕಾರಿ ಶಾಲೆಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ನಡೆದಿದೆ.
ದಿನನಿತ್ಯದಂತೆ ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಏಕಾಏಕಿ ಮಕ್ಕಳ ಮೇಲೆ ಬಿದ್ದಿವೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗಾಯಗೊಂಡ ಮಕ್ಕಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಶಾಲಾ ಕಟ್ಟಡವು ಸಂಪೂರ್ಣ ಶಿಥಿಲಗೊಂಡಿದ್ದು, ಮೇಲ್ಛಾವಣಿಯ ಕಾಂಕ್ರೀಟ್ ಕಿತ್ತುಬಂದಿರುವ ಪರಿಣಾಮ ಒಳಭಾಗದ ಕಬ್ಬಿಣದ ಸರಳುಗಳು ಕಾಣಿಸುತ್ತಿವೆ. ಇಂತಹ ಅಪಾಯಕಾರಿ ಕಟ್ಟಡದಲ್ಲೇ ಮಕ್ಕಳು ಪ್ರತಿನಿತ್ಯ ತರಗತಿಗೆ ಹಾಜರಾಗಬೇಕಾದ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಟ್ಟಡದ ದುಸ್ಥಿತಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರೂ ದುರಸ್ತಿಗೆ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಲಾ ಕಟ್ಟಡವನ್ನು ನವೀಕರಿಸಬೇಕು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.



