ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ವಿವೇಕಾನಂದ ನಗರದ ಶ್ರೀ ಶಾರದಾ ಮಾತೆ ಹಾಗೂ ಶ್ರೀ ರಾಮಕೃಷ್ಣ ಪರಮಹಂಸ ಉದ್ಯಾನವನ ಹಲವು ವರ್ಷಗಳಿಂದ ಗುತ್ತಿಗೆದಾರರ ಸಾಮಗ್ರಿಗಳ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದ್ದು, ಸಾರ್ವಜನಿಕರ ಬಳಕೆಗೆ ಉದ್ಯಾನವನ್ನು ಮುಕ್ತಗೊಳಿಸಿ ಅಭಿವೃದ್ಧಿಪಡಿಸುವಂತೆ ಶ್ರೀ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿ (ರಿ) ವತಿಯಿಂದ ಜಿಲ್ಲಾಧಿಕಾರಿ, ನಗರಸಭೆಯ ಆಡಳಿತಾಧಿಕಾರಿ ಹಾಗೂ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ಸಮಿತಿಯ ಪದಾಧಿಕಾರಿಗಳು ಮಾತನಾಡಿ, ಸುಮಾರು ಎರಡು ವರ್ಷಗಳ ಹಿಂದೆ ₹10 ಲಕ್ಷ ವೆಚ್ಚದಲ್ಲಿ ಉದ್ಯಾನದಲ್ಲಿ ವಾಕಿಂಗ್ ಪಾಥ್ ನಿರ್ಮಿಸಲಾಗಿದ್ದರೂ, 24×7 ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ಗುತ್ತಿಗೆದಾರರು ಕಾಮಗಾರಿ ಸಾಮಗ್ರಿಗಳನ್ನು ಉದ್ಯಾನದಲ್ಲೇ ಸಂಗ್ರಹಿಸಿರುವ ಕಾರಣ ಸಾರ್ವಜನಿಕರಿಗೆ ಅದರ ಉಪಯೋಗವೇ ಇಲ್ಲದಂತಾಗಿದೆ ಎಂದು ದೂರಿದರು.
ಇದರ ಜೊತೆಗೆ ಉದ್ಯಾನದಲ್ಲಿ ಗಿಡಗಂಟಿಗಳು ಬೆಳೆದು ನಿರ್ವಹಣೆ ಇಲ್ಲದೆ ವಾಕಿಂಗ್ ಪಾಥ್ ಹಾಳಾಗುತ್ತಿದ್ದು, ಹಲವು ಬಾರಿ ಮೌಖಿಕ ಹಾಗೂ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಉದ್ಯಾನ ಅಭಿವೃದ್ಧಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ₹60 ಲಕ್ಷ ಅನುದಾನವೂ ಮೀಸಲಾಗಿದ್ದು, ಮೊದಲು ಉದ್ಯಾನದಲ್ಲಿರುವ ಗುತ್ತಿಗೆದಾರರ ಸಾಮಗ್ರಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ನಂತರ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ವಾರ್ಡ್ ಸಂಖ್ಯೆ 11ರ ನಾಗರಿಕರ ಪರವಾಗಿ ಸಮಿತಿಯ ಅಧ್ಯಕ್ಷ ಎ.ಟಿ. ನರೇಗಲ್ಲ ಸೇರಿದಂತೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.



