ಗದಗ: ನಗರದ ಬಳಗಾನೂರ ರಸ್ತೆಯಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಗುರುವಾರ ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳದಲ್ಲಿನ ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನಗರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸುಮಾರು 13 ವರ್ಷಗಳಿಂದ ಕಸ ನಿರ್ವಹಣಾ ಘಟಕದಲ್ಲಿ ಇದೇ ರೀತಿಯ ಅವ್ಯವಸ್ಥೆ ಮುಂದುವರಿದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಅಧಿಕಾರಿಗಳ ನಿರ್ಲಕ್ಷ್ಯವನ್ನು ಪ್ರಶ್ನಿಸಿದರು. ಅನುದಾನದ ಕೊರತೆಯಿದ್ದರೆ ಸರ್ಕಾರದ ಗಮನಕ್ಕೆ ತಂದು ಅಗತ್ಯ ಹಣ ಮಂಜೂರು ಮಾಡಿಸಲು ತಾವು ನೆರವಾಗುವುದಾಗಿ ತಿಳಿಸಿದ ಅವರು, ಅನುದಾನವನ್ನು ನೆಪವಾಗಿಸಿಕೊಳ್ಳದೆ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.
ಕೂಡಲೇ ಪರಿಸರ ತಜ್ಞರನ್ನು ಕರೆಸಿ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಬೇಕು. ಯುದ್ಧೋಪಾಯದಲ್ಲಿ ಕಾರ್ಯಪ್ರವೃತ್ತರಾಗಿ ಸಮಸ್ಯೆ ನಿವಾರಿಸಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪರಿಶೀಲನೆ ವೇಳೆ ನಗರಸಭೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭೆ ಆಯುಕ್ತ ರಾಜಾರಾಮ ಪವಾರ, ಎಇಇ ಲಕ್ಷ್ಮಣ್ಣ ಜೋಗದಂಡಕರ್, ಪರಿಸರ ಅಭಿಯಂತರ ಆನಂದ ಬದಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪಲೋಕಾಯುಕ್ತರು ಸ್ಥಳದಲ್ಲೇ ಅಧಿಕಾರಿಗಳಿಂದ ಮಾಹಿತಿ ಪಡೆದು, ಕಸ ನಿರ್ವಹಣೆಯಲ್ಲಿ ಕಂಡುಬಂದ ಲೋಪಗಳನ್ನು ತಕ್ಷಣ ಸರಿಪಡಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.



