ಬೆಂಗಳೂರು: ನಮ್ಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್ ಸೆಲ್ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,
ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯರೊಬ್ಬರು,
ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು ಎಂದರು.



