ರಾಯಚೂರು:– ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಎನ್ನುವುದು ವಿಪರೀತ ಹಂತಕ್ಕೆ ತಲುಪಿದ್ದು, ಇದೀಗ ರಾಜ್ಯ ಸರ್ಕಾರವು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ.
ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಫಯಾಜ್, ಶೇಖ್ ಎಂಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಸೀದ್ ಬಂಧಿತರು. ಈ ತಂಡ ಮೊಬೈಲ್ ಆ್ಯಪ್ನಲ್ಲಿ ಫೈನಾನ್ಸ್ಗಳ ಸಾಲ ಬಾಕಿ ಇರುವವರನ್ನ ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನ ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕುತ್ತಿದ್ದರು
ಸೈಯದ್ ಬಾಷಾ ಎಂಬುವವರ ಬುಲೇರೋ ವಾಹನವನ್ನ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹಿಡಿದು 12 ಸಾವಿರ ರೂ. ಬೇಡಿಕೆ ಇಟ್ಟು ವಾಹನ ಜಪ್ತಿ ಮಾಡಿದ್ದರು. ಸಾಲ ಮಾಡಿದ್ದ ಫೈನಾನ್ಸ್ ಕಂಪನಿಯಲ್ಲಿ ಸೈಯದ್ ಬಾಷಾ ಕಂತು ಕಟ್ಟಿ ಬಂದಿದ್ದರೂ ವಾಹನ ಬಿಟ್ಟಿರಲಿಲ್ಲ. ಫೈನಾನ್ಸ್ನಲ್ಲಿ ಕಟ್ಟಿದರೆ ಸಾಲಲ್ಲ, ನಮಗೂ ಹಣ ಕೊಡಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಅನುಮಾನದ ಮೇಲೆ ಸೈಯದ್ ಬಾಷಾ ಸಹೋದರ ಅಜೀಜ್ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.



