ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಕೋಲ ತಾಲೂಕಿನ ಪ್ರಸಿದ್ಧ ವಿಭೂತಿ ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಹೇರಲಾಗಿದೆ.
ಯಾಣದ ಸಮೀಪದಲ್ಲಿರುವ ವಿಭೂತಿ ಜಲಪಾತ ಮಳೆಗಾಲದಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಭಾರಿ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಹೊಸಕಂಬಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.
ಈ ಹಿಂದೆ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಸಿಗರ ಜೀವಕ್ಕೆ ಅಪಾಯ ಉಂಟಾದ ಘಟನೆಗಳು ನಡೆದಿದ್ದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜೂನ್ ಎರಡನೇ ವಾರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ತಡೆ ವಿಧಿಸಲಾಗಿದೆ.
ಅರಣ್ಯ ಇಲಾಖೆ ಆದೇಶದಂತೆ ಮುಂದಿನ ಸೂಚನೆ ಬರುವವರೆಗೆ ವಿಭೂತಿ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧವಾಗಿದ್ದು, ಪ್ರವಾಸಿಗರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.



