HomeGadag News‘ಭರವಸೆ ಹೆಚ್ಚು, ಸಾಧನೆ ಕಡಿಮೆ’: ಮೋದಿ ಸರ್ಕಾರದ ವಿರುದ್ಧ ಅಶೋಕ ಮಂದಾಲಿ ವಾಗ್ದಾಳಿ

‘ಭರವಸೆ ಹೆಚ್ಚು, ಸಾಧನೆ ಕಡಿಮೆ’: ಮೋದಿ ಸರ್ಕಾರದ ವಿರುದ್ಧ ಅಶೋಕ ಮಂದಾಲಿ ವಾಗ್ದಾಳಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತವು ಸಾಧನೆಗಿಂತ ಸುಳ್ಳು ಭರವಸೆಗಳು, ವೈಫಲ್ಯಗಳು, ಬೆಲೆ ಏರಿಕೆ, ನಿರುದ್ಯೋಗ ಹಾಗೂ ರೈತರ ಸಂಕಷ್ಟಗಳಿಂದಲೇ ಗುರುತಿಸಿಕೊಂಡಿದೆ ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದೀರ್ಘ ಪ್ರಕಟಣೆ ನೀಡಿರುವ ಅವರು, “ಗರೀಬ್ ಕಲ್ಯಾಣ್” ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ವಾಸ್ತವದಲ್ಲಿ ಕೆಲವೇ ಉದ್ಯಮಿಗಳ ಹಿತಾಸಕ್ತಿಗೆ ಆದ್ಯತೆ ನೀಡಿದ್ದು, ಸಾಮಾನ್ಯ ಜನರ ಬದುಕು ದುಸ್ತರಗೊಳಿಸಿದೆ ಎಂದು ಆರೋಪಿಸಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, 2022ರೊಳಗೆ ರೈತರ ಆದಾಯ ದ್ವಿಗುಣ, ಗುಡಿಸಲು ಮುಕ್ತ ಭಾರತ, 100 ಸ್ಮಾರ್ಟ್ ಸಿಟಿಗಳು, ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಆತ್ಮನಿರ್ಭರ ಭಾರತ, ಎಲ್ಲರಿಗೂ ಆರೋಗ್ಯ ವಿಮೆ, ಜಲ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳು ನಿರೀಕ್ಷಿತ ಗುರಿ ತಲುಪಿಲ್ಲ ಎಂದು ಅವರು ದೂರಿದರು.

ದೇಶದ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮೆ ಮಾಡುವ ಭರವಸೆ ಸೇರಿದಂತೆ ಹಲವು ಚುನಾವಣಾ ಆಶ್ವಾಸನೆಗಳು ಜನರನ್ನು ಸೆಳೆಯುವ ರಾಜಕೀಯ ಘೋಷಣೆಗಳಾಗಿ ಉಳಿದಿವೆ ಎಂದು ಟೀಕಿಸಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇಂದು ಲಕ್ಷಾಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಯುವಕರನ್ನು ನಿರುದ್ಯೋಗದ ಅಂಚಿಗೆ ತಳ್ಳಿದೆ ಎಂದು ಆರೋಪಿಸಿದ ಅಶೋಕ ಮಂದಾಲಿ, ಪದವೀಧರ ಯುವಕರಲ್ಲಿ ನಿರುದ್ಯೋಗ ಪ್ರಮಾಣ ಆತಂಕಕಾರಿ ಮಟ್ಟ ತಲುಪಿದೆ ಎಂದು ಹೇಳಿದರು.

ಪೇಪರ್ ಲೀಕ್ ಹಗರಣಗಳು, ಅಗ್ನಿಪಥ್ ಯೋಜನೆ, ಸರ್ಕಾರಿ ನೇಮಕಾತಿಗಳ ವಿಳಂಬ ಹಾಗೂ ಉದ್ಯೋಗಾವಕಾಶಗಳ ಕೊರತೆಯಿಂದ ಯುವಜನತೆ ಭವಿಷ್ಯದ ಬಗ್ಗೆ ಆತಂಕದಲ್ಲಿದೆ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಆಹಾರ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಚುನಾವಣೆ ಮುಗಿದ ತಕ್ಷಣ ಇಂಧನ ಹಾಗೂ ಎಲ್‌ಪಿಜಿ ದರಗಳನ್ನು ಹೆಚ್ಚಿಸುವುದು ಕೇಂದ್ರ ಸರ್ಕಾರದ ರೂಢಿಯಾಗಿದೆ ಎಂದು ಆರೋಪಿಸಿದರು.

2014ಕ್ಕೆ ಹೋಲಿಸಿದರೆ ಇಂದಿನ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರಗಳು ಗಣನೀಯವಾಗಿ ಏರಿಕೆಯಾಗಿದ್ದು, ಸಾಮಾನ್ಯ ವರ್ಗದ ಜನರು ಆರ್ಥಿಕ ಒತ್ತಡಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ಈಡೇರಿಲ್ಲ. ಕನಿಷ್ಠ ಬೆಂಬಲ ಬೆಲೆ (MSP), ರಸಗೊಬ್ಬರ ದರ ಏರಿಕೆ, ಕೃಷಿ ವೆಚ್ಚ ಹೆಚ್ಚಳ ಹಾಗೂ ಅನುದಾನ ಕಡಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆರೋಪಿಸಿದರು.

ರಸಗೊಬ್ಬರ ಸಬ್ಸಿಡಿ ಕಡಿತ ಹಾಗೂ ಕೃಷಿ ಕ್ಷೇತ್ರದ ಮೇಲಿನ ನಿರ್ಲಕ್ಷ್ಯದಿಂದ ರೈತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.

ಜಿಎಸ್‌ಟಿ ಜಾರಿಯಾದ ನಂತರ ಕರ್ನಾಟಕದಂತಹ ತೆರಿಗೆ ಕೊಡುಗೆ ನೀಡುವ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ. ಕರ್ನಾಟಕ ದೇಶದ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾಗಿದ್ದರೂ, ಕೇಂದ್ರದಿಂದ ಮರಳಿ ಸಿಗುವ ಪಾಲು ತೀರಾ ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಹಣಕಾಸು ಆಯೋಗದ ಶಿಫಾರಸುಗಳು ಹಾಗೂ ಜಿಎಸ್‌ಟಿ ವ್ಯವಸ್ಥೆಯಿಂದ ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಸಂಪನ್ಮೂಲಗಳು ಕಡಿಮೆಯಾಗುತ್ತಿವೆ ಎಂದು ಅಶೋಕ ಮಂದಾಲಿ ಆರೋಪಿಸಿದರು.

ಆರ್ಥಿಕತೆ ಮತ್ತು ರೂಪಾಯಿ ಮೌಲ್ಯ ಕುಸಿತ

ದೇಶದ ಆರ್ಥಿಕ ಬೆಳವಣಿಗೆ ದರ ಕುಸಿಯುತ್ತಿದ್ದು, ರೂಪಾಯಿ ಮೌಲ್ಯ ಇತಿಹಾಸದಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿದೆ. ದೇಶದ ಸಾಲದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ಪರಿಣಾಮವಾಗಿ ಸಣ್ಣ ಕೈಗಾರಿಕೆಗಳು, ಎಂಎಸ್‌ಎಂಇಗಳು ಹಾಗೂ ಸ್ಟಾರ್ಟ್‌ಅಪ್ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ದೂರಿದರು. ಕೇಂದ್ರ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಪ್ರಚಾರ ರಾಜಕಾರಣದಲ್ಲಿ ತೊಡಗಿದೆ. ಜನರ ನೈಜ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಮೊದಲ ಆದ್ಯತೆಯಾಗಬೇಕು ಎಂದು ಅಶೋಕ ಮಂದಾಲಿ ಆಗ್ರಹಿಸಿದ್ದಾರೆ.

“ಪ್ರತಿ ವರ್ಷ ಎರಡು ಕೋಟಿ ಉದ್ಯೋಗ, ರೈತರ ಆದಾಯ ದ್ವಿಗುಣ, 15 ಲಕ್ಷ ರೂ. ಜಮೆ, ಬೆಲೆ ನಿಯಂತ್ರಣ ಸೇರಿದಂತೆ ಹಲವು ಭರವಸೆಗಳು ಘೋಷಣೆಯಲ್ಲೇ ಉಳಿದಿವೆ. 12 ವರ್ಷದ ಮೋದಿ ಆಡಳಿತದ ಸಾಧನೆಗಿಂತ ವೈಫಲ್ಯಗಳೇ ಹೆಚ್ಚಾಗಿವೆ.”

ಅಶೋಕ ಮಂದಾಲಿ

ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ

  • ಮೋದಿ ಸರ್ಕಾರದ ಪ್ರಮುಖ ವೈಫಲ್ಯಗಳು
  • ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ಈಡೇರಿಲ್ಲ
  • ರೈತರ ಆದಾಯ ದ್ವಿಗುಣ ಮಾಡುವ ಗುರಿ ವಿಫಲ
  • ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರಗಳಲ್ಲಿ ಭಾರೀ ಏರಿಕೆ
  • ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಯೋಜನೆಗಳು ನಿರೀಕ್ಷಿತ ಫಲ ನೀಡಿಲ್ಲ
  • ನಿರುದ್ಯೋಗ ಪ್ರಮಾಣ ಏರಿಕೆ
  • ಕರ್ನಾಟಕಕ್ಕೆ ಜಿಎಸ್‌ಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ಅನ್ಯಾಯ
  • ರೂಪಾಯಿ ಮೌಲ್ಯ ಕುಸಿತ ಹಾಗೂ ಸಾಲದ ಹೊರೆ ಹೆಚ್ಚಳ
  • ರಸಗೊಬ್ಬರ ಸಬ್ಸಿಡಿ ಕಡಿತದಿಂದ ರೈತರಿಗೆ ಸಂಕಷ್ಟ
  • ಸಣ್ಣ ಕೈಗಾರಿಕೆಗಳು ಮತ್ತು ಸ್ಟಾರ್ಟ್‌ಅಪ್‌ಗಳ ಮೇಲೆ ಆರ್ಥಿಕ ಒತ್ತಡ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!