ದೊಡ್ಡಬಳ್ಳಾಪುರ:- ದೊಡ್ಡಬಳ್ಳಾಪುರ ನಗರದ ಶಾಂತಿನಗರ ಪ್ರದೇಶದಲ್ಲಿ ಸುಪ್ರಭಾತ ಹಾಡನ್ನು ಜೋರಾಗಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಜರುಗಿದೆ.
ಮನೆಯೊಳಗೆ ತಾಯಿ ವಿಶ್ರಾಂತಿಯಲ್ಲಿ ಇದ್ದ ಕಾರಣ ಧ್ವನಿ ಕಡಿಮೆ ಮಾಡುವಂತೆ ಮುಸ್ಲಿಂ ಯುವಕ ಕೇಳಿಕೊಂಡಿದ್ದಾನೆ ಎನ್ನಲಾಗಿದ್ದು, ಇದಕ್ಕೆ ಹಿಂದೂ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ತೀವ್ರಗೊಂಡು ಗಲಾಟೆಯ ವಾತಾವರಣ ನಿರ್ಮಾಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಎರಡೂ ಕಡೆಯವರನ್ನು ಕರೆಸಿ ಶಾಂತಿ ಸಭೆ ನಡೆಸಿದ್ದಾರೆ.
ದೇವಾಲಯದ ಪೂಜಾರಿಯಿಂದ ದೂರು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಕಾಪಾಡುವಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ. ಸದ್ಯ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಪ್ರದೇಶದಲ್ಲಿ ಶಾಂತಿಯುತ ವಾತಾವರಣ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.



