ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲ (ಸಿಲಿಂಡರ್ ) ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡು, ಕೆಎಂಸಿಆರ್ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 9 ಅಯ್ಯಪ್ಪ ಮಾಲಾಧಾರಿಗಳು ಪೈಕಿ ನಿಜಲಿಂಗಪ್ಪ ಬೇಪುರಿ ಹಾಗೂ ಸಂಜಯ ಸವದತ್ತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ.5 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿ&ಆರ್ಐ)ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಕೆಎಂಸಿಆರ್ಐ ಸಂಸ್ಥೆಯು ಚಿಕಿತ್ಸೆಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗಿತ್ತು. ಅಲ್ಲದೇ ಬೇರೆ ಕಡೆಯ ವಿಶೇಷ ತಜ್ಞ ವೈದ್ಯರು ಮತ್ತು ಪ್ಲಾಸ್ಟಿಕ್ ಸರ್ಜನ್ಗಳನ್ನು ಕರೆಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶೇ.೮೦ ರಿಂದ ೯೦ರಷ್ಟು ದೇಹವು ಸುಟ್ಟಿರುವ ಕಾರಣ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೃತರ ಕುಟುಂಬಸ್ಥರಿಗೆ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮುಖ್ಯಮಂತ್ರಿಗಳು ಸಹ ಮೃತರಿಗೆ ಸಾಂತ್ವನ ತಿಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಕೆಎಂಸಿಆರ್ಐ ನಿರ್ದೇಶಕರಾದ ಡಾ. ಎಸ್.ಎಫ್. ಕಮ್ಮಾರ, ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆಯುತ್ತಿದ್ದು, ವಿನಾಯಕ ಎಂಬ ಯುವಕನನ್ನು ಬರ್ನ್ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ. ಆತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖನಾಗುತ್ತಿದ್ದಾನೆ. ಉಳಿದವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಅವರಿಗೆ ೪ ಜನ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಕೆಎಂಸಿಆರ್ಐ ವೈದ್ಯರು ಹಾಗೂ ಕುಟುಂಬಸ್ಥರೊAದಿಗೆ ಚಿಕಿತ್ಸೆ ಕುರಿತು ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಇಂತಹ ಘಟನೆಗಳು ಸಂಭವಿಸದAತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.



