HomeKarnataka Newsಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

For Dai;y Updates Join Our whatsapp Group

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ನಡೆಸುವಂತೆ ಸೂಚಿಸಿದ್ದು ತಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಜೈಲಿನಲ್ಲಿ ದಾಳಿ ನಡೆಸಬೇಕಾದರೆ ಗೃಹ ಇಲಾಖೆಯ ಅನುಮತಿ ಅಗತ್ಯವಿದೆ. ಎರಡು ವಾರಗಳ ಹಿಂದೆ ತಾವು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ಲೋಪಗಳು ಕಂಡುಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅನುಮತಿ ಪಡೆದು ಸಿಸಿಬಿ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.

ಅಧಿಕಾರಿಗಳಿಂದ ಬಂದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ. ಅಕ್ರಮಗಳಿಗೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚನೆ ನೀಡಿರುವುದಾಗಿ ಸಚಿವರು ಹೇಳಿದರು.

ಪರಪ್ಪನ ಅಗ್ರಹಾರ ಮಾತ್ರವಲ್ಲದೆ ರಾಜ್ಯದ ಎಲ್ಲ ಕಾರಾಗೃಹಗಳಲ್ಲೂ ಇಂತಹ ದಿಢೀರ್ ಕಾರ್ಯಾಚರಣೆಗಳನ್ನು ನಡೆಸಲಾಗುವುದು. ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ನಿರಂತರ ತಪಾಸಣೆ ನಡೆಸುವ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿಕಾರಿಗಳನ್ನು ಅಮಾನತು ಮಾಡುವುದು ಅಥವಾ ಸೇವೆಯಿಂದ ವಜಾಗೊಳಿಸುವುದಕ್ಕೆ ನಿರ್ದಿಷ್ಟ ಮಾನದಂಡಗಳಿದ್ದು, ಅದರಂತೆ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಜೈಲಿನಲ್ಲಿ ಜಾಮರ್ ವ್ಯವಸ್ಥೆ ಇದ್ದರೂ ಕೆಲವು ಪ್ರದೇಶಗಳಲ್ಲಿ ಅದು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಹೀಗಾಗಿ ಡಿಜಿಟಲ್ ವ್ಯವಸ್ಥೆಯ ಆಡಿಟ್ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಜೈಲಿನಲ್ಲಿ ಯಾರಿಗೂ ವಿಐಪಿ ಸೌಲಭ್ಯ ನೀಡಬಾರದು. ದಾಳಿಯಲ್ಲಿ ಪತ್ತೆಯಾದ ವಸ್ತುಗಳ ಕುರಿತು ಸದ್ಯ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಮಹಜರು ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಮೊಬೈಲ್ ಸೇರಿದಂತೆ ನಿಷೇಧಿತ ವಸ್ತುಗಳು ಜೈಲಿನೊಳಗೆ ಹೇಗೆ ಬಂದವು ಮತ್ತು ಇದಕ್ಕೆ ಯಾರ ಸಹಕಾರವಿತ್ತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಯಲಿದೆ ಎಂದರು.

ಸಚಿವ ಬಿ. ನಾಗೇಂದ್ರ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಮೊದಲು ತಮ್ಮ ಪಕ್ಷದ ನಾಯಕರ ವಿರುದ್ಧದ ಆರೋಪಗಳಿಗೆ ಉತ್ತರಿಸಬೇಕು ಎಂದು ತಿರುಗೇಟು ನೀಡಿದರು.

ವಿಜಯೇಂದ್ರ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಮೊದಲು ಅವರು ಯತ್ನಾಳ್ ಅವರ ಹೇಳಿಕೆಗಳ ಬಗ್ಗೆ ಗಮನ ಹರಿಸಲಿ ಎಂದು ಹೇಳಿದರು. ಬಿಜೆಪಿ ನಾಯಕರು ನೈತಿಕತೆಯ ಬಗ್ಗೆ ಮಾತನಾಡುವ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ಕುರಿತು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿಯ ಹಲವು ಶಾಸಕರ ವಿರುದ್ಧವೂ ವಿವಿಧ ಪ್ರಕರಣಗಳಿವೆ ಎಂದು ಆರೋಪಿಸಿದ ಅವರು, ಇತರರತ್ತ ಬೆರಳು ತೋರಿಸುವ ಮೊದಲು ತಮ್ಮ ಪಕ್ಷದ ನಾಯಕರ ವಿರುದ್ಧ ಇರುವ ಪ್ರಕರಣಗಳ ಬಗ್ಗೆ ಸ್ವಯಂ ಪರಿಶೀಲನೆ ನಡೆಸಿಕೊಳ್ಳಲಿ ಎಂದು ಹೇಳಿದರು.

ಸಿಬಿಐ ಅಥವಾ ಆದಾಯ ತೆರಿಗೆ ಇಲಾಖೆಯಂತಹ ತನಿಖಾ ಸಂಸ್ಥೆಗಳು ಆರೋಪ ಮಾಡಿವೆ ಎಂಬ ಕಾರಣಕ್ಕೆ ಮಾತ್ರ ಯಾರನ್ನೂ ತಪ್ಪಿತಸ್ಥರೆಂದು ಪರಿಗಣಿಸಲು ಸಾಧ್ಯವಿಲ್ಲ. ವಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಆರೋಪಗಳನ್ನು ಮಾಡುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img