ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ಶಕುಂತಲಾ ನಾಯಕ್ ಅವರು ನೂತನವಾಗಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕೃತಪುರ ಸೇವಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಮಾತನಾಡಿದ ಕೃತಪುರ ಸೇವಾ ಸಮಿತಿ ಮಾಜಿ ಅಧ್ಯಕ್ಷ ಜಗದೀಶ್ ಎಸ್.ಪಿ., ನೂತನ ಪಿಎಸ್ಐ ಶಕುಂತಲಾ ನಾಯಕ್ ಅವರು ಈ ಹಿಂದೆ ಸಂಚಾರಿ ಠಾಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ಜನಮನ್ನಣೆ ಗಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು ಪೊಲೀಸ್ ಇಲಾಖೆಯಲ್ಲಿ ತಮ್ಮದೇ ಆದ ವಿಶೇಷ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಬೆಟಗೇರಿ ಬಡಾವಣೆ ಠಾಣೆಯ ಪಿಎಸ್ಐ ಆಗಿ ನೇಮಕಗೊಂಡಿದ್ದು, ತಮ್ಮ ಸೇವೆಯನ್ನು ಯಶಸ್ವಿಯಾಗಿ ಮುಂದುವರಿಸಲಿ ಎಂದು ಹಾರೈಸಿದರು.
ಸಿಪಿಐ ಧೀರಜ್ ಶಿಂಧೆ ಮಾತನಾಡಿ, ಶಕುಂತಲಾ ನಾಯಕ್ ಅವರು ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರೊಂದಿಗೆ ಬೆರೆತು ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಸೌಮ್ಯವಾಗಿ ವರ್ತಿಸಿ ಜನೋಪಯೋಗಿ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಪೊಲೀಸ್ ಇಲಾಖೆಗೆ ಇಂತಹ ನಿಷ್ಠಾವಂತ ಅಧಿಕಾರಿಗಳ ಅಗತ್ಯವಿದ್ದು, ಬಡಾವಣೆ ಠಾಣೆಯಲ್ಲೂ ಅವರು ನಿಸ್ವಾರ್ಥ ಸೇವೆ ಮುಂದುವರಿಸಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಕೃತಪುರ ಸೇವಾ ಸಮಿತಿ ಅಧ್ಯಕ್ಷ ಶಶಿ ಡಿಗ್ಗಾವಿ, ಸಿದ್ದು, ಕಾರ್ತಿಕ್, ಮಂಜು, ರಮೇಶ ಛಲವಾದಿ, ಸ್ವರೂಪ್ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಚಾರಿ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ. ಇದೀಗ ಬೆಟಗೇರಿ ಬಡಾವಣೆ ಠಾಣೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಹಗಲಿರುಳು ಸ್ಪಂದಿಸುತ್ತೇನೆ. ಠಾಣಾ ವ್ಯಾಪ್ತಿಯಲ್ಲಿನ ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಸ್ಥಳೀಯರ ಹಿತ ಕಾಪಾಡಲು ನಿರಂತರವಾಗಿ ಶ್ರಮಿಸುತ್ತೇನೆ.
— ಶಕುಂತಲಾ ನಾಯಕ್, ಪಿಎಸ್ಐ, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ



