ವಿಜಯಸಾಕ್ಷಿ ಸುದ್ದಿ, ಗದಗ: ಜನಪದ ಕಲೆ, ತಾತ್ವಿಕ ವಿಚಾರ ಮತ್ತು ಸಂಗೀತದ ಸೊಗಡನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸಿದ ‘ತಾತ್ವಿಕ ಜನಪದ ಸೌರಭ’ ಕಾರ್ಯಕ್ರಮ ನಗರದ ಹೊಸಪೇಟೆ ಚಕ್ನ ಕಾಳಿಕಾದೇವಿ ಸಮುದಾಯ ಭವನದಲ್ಲಿ ಸಾಂಸ್ಕೃತಿಕ ರಂಗು ತುಂಬಿತು. ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಸಾಂಪ್ರದಾಯಿಕ ಕಲೆ ಹಾಗೂ ಕಲಾವಿದರನ್ನು ಉಳಿಸಿ ಬೆಳೆಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾಂಸ್ಕೃತಿಕ ಸಂಘಟನೆಗಳು ಹಾಗೂ ಕಲಾವಿದರು ಅವುಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಕಳೆದ 15 ವರ್ಷಗಳಿಂದ ಸಮಾಜಮುಖಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ರಂಗಾಸಕ್ತಿ ಬೆಳೆಸುತ್ತಿದ್ದು, ಗದುಗಿನ ಸಾಂಸ್ಕೃತಿಕ ವಲಯದಲ್ಲಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ರಕರ್ತ ಸೂರಜ್ ಮಯೇಕರ ಅವರು ‘ಮಣ್ಣಿನ ಕಲಾಕೃತಿಗಳು’ ವಿಷಯದ ಕುರಿತು ಉಪನ್ಯಾಸ ನೀಡಿದರು. ಶಿವು ಭಜಂತ್ರಿ ಮತ್ತು ತಂಡ ಹಾಗೂ ಬಂಜಾರ ಅಕಾಡೆಮಿ ಸದಸ್ಯೆ ಸಾವಿತ್ರಿ ಲಮಾಣಿ ಅವರ ತಾತ್ವಿಕ ಜನಪದ ಗಾಯನ ಸಭಿಕರ ಮನಗೆದ್ದಿತು.
ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣವರ ಜನಪದ ಸಂಸ್ಕೃತಿಯ ಬೆಳವಣಿಗೆಯ ಕುರಿತು ಮಾತನಾಡಿದರು. ಬೆಟಗೇರಿ ಶ್ರೀಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶ್ರೀಧರ ಕೊಣ್ಣೂರ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸುರೇಶ ಕೊಪ್ಪದ, ಡಾ. ದತ್ತಪ್ರಸನ್ನ ಲ. ಪಾಟೀಲ, ವಿಶ್ವನಾಥ ಯ. ಕಮ್ಮಾರ, ಎನ್.ಐ. ಪತ್ತಾರ, ಶ್ರೀನಿವಾಸ ಹುಬ್ಬಳ್ಳಿ, ವಿಶ್ವನಾಥ ಬೇಂದ್ರೆ, ಸತೀಶ ಹೊರಪೇಟೆ, ಪ್ರಕಾಶ ಬಡಿಗೇರ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಶ್ರೀಮತಿ ಸಾವಿತ್ರಿ ಲಮಾಣಿ ಪ್ರಾರ್ಥಿಸಿದರು. ಅಶೋಕ ಸುತಾರ ಸ್ವಾಗತಿಸಿದರು. ಮೌನೇಶ ಸಿ. ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವನಾಥ ಯ. ಕಮ್ಮಾರ ಕಾರ್ಯಕ್ರಮ ನಿರೂಪಿಸಿದರು.
“ಸಾಂಪ್ರದಾಯಿಕ ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಾಂಸ್ಕೃತಿಕ ಸಂಘಟನೆಗಳು ಹಾಗೂ ಕಲಾವಿದರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು.”
– ಡಾ. ಬಸವರಾಜ ಬಳ್ಳಾರಿ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ



