HomeGadag Newsಬರ ಎದುರಿಸಲು ತುರ್ತು ಕ್ರಮಕ್ಕೆ ಸೂಚನೆ

ಬರ ಎದುರಿಸಲು ತುರ್ತು ಕ್ರಮಕ್ಕೆ ಸೂಚನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಗ್ರಾಮೀಣ ಜನರಿಗೆ ಉದ್ಯೋಗದ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ತುರ್ತು ಮತ್ತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಗದಗ ಜಿಲ್ಲಾ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶನಿವಾರ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿ ಭಾನುವಾರ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಲಿದ್ದು, ಗದಗ ಜಿಲ್ಲೆಯ ಸ್ಥಿತಿಯನ್ನು ವಿಶೇಷವಾಗಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿರುವುದರಿಂದ ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಶಾಸಕರು ಹಾಗೂ ಜನಪ್ರತಿನಿಧಿಗಳು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಸ್ಥಿತಿ ಪರಿಶೀಲನೆ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ವರದಿ ಆಧರಿಸಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಸಮಸ್ಯೆ ಎದುರಾದ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬರದ ಪರಿಣಾಮವಾಗಿ ಗ್ರಾಮೀಣ ಜನರು ಉದ್ಯೋಗ ಅರಸಿ ವಲಸೆ ಹೋಗದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಲಭ್ಯವಿರುವ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಚಿವರು ಸೂಚಿಸಿದರು.

ಜಲಜೀವನ ಮಿಷನ್ ಹಾಗೂ ವಿಬಿಜಿ ರಾಮ್‌ಜಿ ಯೋಜನೆಯಡಿ ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬವಿಲ್ಲದೆ ಕೈಗೊಳ್ಳಬೇಕು. ಜನರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಂಗಾರು ಪೂರ್ವ ಉತ್ತಮ ಮಳೆಯಿಂದ ಜಿಲ್ಲೆಯಲ್ಲಿ ಶೇ.82ರಷ್ಟು ಬಿತ್ತನೆ ನಡೆದಿದ್ದರೂ ನಂತರ ಮಳೆ ಕೊರತೆಯಿಂದ ಹೆಸರು, ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳು ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ರೈತರಿಗೆ ಬೆಳೆ ವಿಮೆ ಅತ್ಯಗತ್ಯವಾಗಿದ್ದು, ಸಾಲದ ಕಾರಣಕ್ಕೆ ಯಾರೂ ವಿಮೆಯಿಂದ ವಂಚಿತರಾಗಬಾರದು ಎಂದು ಸಚಿವರು ಹೇಳಿದರು.

ಕಟ್ ಬಾಕಿ ಹಾಗೂ ಒನ್‌ಟೈಮ್ ಸೆಟಲ್‌ಮೆಂಟ್ (ಒಟಿಎಸ್) ಮಾಡಿಕೊಂಡಿರುವ ರೈತರಿಗೆ ಹೊಸ ಖಾತೆ ತೆರೆಯುವ ಮೂಲಕ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ ಕಲ್ಪಿಸುವಂತೆ ಲೀಡ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ಎಚ್.ಕೆ. ಪಾಟೀಲ್, ರೈತರು ಬೆಳೆ ಸಾಲ ಮರುಪಾವತಿಸಿಲ್ಲ ಎಂಬ ಕಾರಣಕ್ಕೆ ಬೆಳೆ ವಿಮೆಯಿಂದ ವಂಚಿತರಾಗಬಾರದು ಎಂದು ಆಗ್ರಹಿಸಿದರು. ಶಾಸಕರಾದ ಜಿ.ಎಸ್. ಪಾಟೀಲ್, ಸಿ.ಸಿ. ಪಾಟೀಲ್, ಡಾ. ಚಂದ್ರು ಲಮಾಣಿ ಹಾಗೂ ಎಸ್.ವಿ. ಸಂಕನೂರ ಅವರು ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾಹಿತಿ ನೀಡಿ, ಜನವರಿಯಿಂದ ಜುಲೈ 17ರವರೆಗೆ ವಾಡಿಕೆ 229.5 ಮಿ.ಮೀ. ಮಳೆಗೆ ವಿರುದ್ಧವಾಗಿ 227.2 ಮಿ.ಮೀ. ಮಳೆಯಾಗಿದ್ದರೂ, ಜುಲೈ 1ರಿಂದ 17ರವರೆಗೆ ವಾಡಿಕೆ 36.4 ಮಿ.ಮೀ. ಮಳೆಗೆ ಕೇವಲ 21.6 ಮಿ.ಮೀ. ಮಳೆಯಾಗಿದ್ದು, ಶೇ.41ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ತಿಳಿಸಿದರು.

2026-27ರ ಮುಂಗಾರು ಹಂಗಾಮಿನಲ್ಲಿ 3,13,719 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ 2,57,401 ಹೆಕ್ಟೇರ್ (ಶೇ.82.05) ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 37,059 ಅರ್ಜಿಗಳ ಮೂಲಕ 38,388 ಹೆಕ್ಟೇರ್ ಪ್ರದೇಶ ವಿಮೆಗೆ ಒಳಪಡಿಸಲಾಗಿದೆ ಎಂದರು.

ಪ್ರವಾಹ ಮುನ್ನೆಚ್ಚರಿಕಾ ಕ್ರಮವಾಗಿ ಮಲಪ್ರಭಾ ಹಾಗೂ ತುಂಗಭದ್ರಾ ನದಿ ಪಾತ್ರದ 20 ಗ್ರಾಮಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಗುರುತಿಸಿ 43 ಕಾಳಜಿ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ತುರ್ತು ರಕ್ಷಣಾ ಕಾರ್ಯಕ್ಕಾಗಿ 51 ಈಜುಗಾರರನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಮಳೆ ಹಾಗೂ ಸಿಡಿಲಿನಿಂದ ಮೃತಪಟ್ಟ ನಾಲ್ವರು ಸಂತ್ರಸ್ತರ ಕುಟುಂಬಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹20 ಲಕ್ಷ ಪರಿಹಾರ ವಿತರಿಸಲಾಗಿದ್ದು, ಭಾಗಶಃ ಹಾನಿಗೊಳಗಾದ 20 ಮನೆಗಳಿಗೆ ₹1.30 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

“ಗದಗ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಬರದಿಂದ ಜನರು ವಲಸೆ ಹೋಗದಂತೆ ಉದ್ಯೋಗಕ್ಕೂ ಮೊದಲ ಆದ್ಯತೆ ನೀಡಬೇಕು.”

– ಈಶ್ವರ ಬಿ. ಖಂಡ್ರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು

ಗದಗ ಜಿಲ್ಲೆಯ ಬರ ಪರಿಸ್ಥಿತಿ

  • ಜುಲೈ ಮೊದಲ 17 ದಿನಗಳ ಮಳೆ ಕೊರತೆ: ಶೇ.41
  • ಬಿತ್ತನೆ ಪೂರ್ಣ: 2.57 ಲಕ್ಷ ಹೆಕ್ಟೇರ್ (82.05%)
  • ಬೆಳೆ ವಿಮೆ ಅರ್ಜಿಗಳು: 37,059
  • ವಿಮೆ ವ್ಯಾಪ್ತಿ: 38,388 ಹೆಕ್ಟೇರ್
  • ಸೂಕ್ಷ್ಮ ಪ್ರವಾಹ ಗ್ರಾಮಗಳು: 20
  • ಕಾಳಜಿ ಕೇಂದ್ರಗಳು: 43
  • ತುರ್ತು ಕಾರ್ಯಕ್ಕೆ ಸನ್ನದ್ಧ ಈಜುಗಾರರು: 51
  • ಸಿಡಿಲು/ಮಳೆ ಪರಿಹಾರ: 4 ಕುಟುಂಬಗಳಿಗೆ ₹20 ಲಕ್ಷ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img