ಬೆಂಗಳೂರು: ನೇಮಕಾತಿಯಲ್ಲಿ ಒಳಮೀಸಲಾತಿ ಹಂಚಿಕೆ ಕುರಿತು ಉಂಟಾಗಿರುವ ಗೊಂದಲದ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೋಸ್ಟರ್ ವ್ಯವಸ್ಥೆ ರೂಪಿಸುವ ಸಂದರ್ಭದಲ್ಲಿ ಕೆಲವು ವರ್ಗಗಳಿಗೆ ಹೆಚ್ಚು ಮೀಸಲಾತಿ ಸಿಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿದ್ದು, ಈ ಕುರಿತು ಸಂಪುಟದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು. ಪರಿಶಿಷ್ಟ ಜಾತಿ ಸಮುದಾಯಕ್ಕೆ 17 ಶೇಕಡಾ ಒಳಮೀಸಲಾತಿ ನೀಡುವ ತೀರ್ಮಾನ ಈಗಾಗಲೇ ಕೈಗೊಳ್ಳಲಾಗಿದ್ದು, ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇಕಡಾ 1% ಮೀಸಲಾತಿ ನೀಡುವ ಬೇಡಿಕೆಯೂ ಇದೆ ಎಂದು ಹೇಳಿದರು.
ಇನ್ನು 56 ಶೇಕಡಾ ಮೀಸಲಾತಿ ವಿಷಯಕ್ಕೆ ನ್ಯಾಯಾಲಯದಿಂದ ತಡೆ ಇರುವುದರಿಂದ ಈ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಬೇಕಾಗಿದೆ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. 56% ಶೇಕಡಾ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೂ ಗೊತ್ತಿದ್ದರೂ ರಾಜಕೀಯ ಉದ್ದೇಶದಿಂದ ಜನರನ್ನು ಪ್ರಚೋದಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೊಂದೆಡೆ ಫೋನ್ ಟ್ಯಾಪ್ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸರ್ಕಾರ ಯಾರ ಫೋನನ್ನೂ ಟ್ಯಾಪ್ ಮಾಡುತ್ತಿಲ್ಲ. ಈ ಬಗ್ಗೆ ದಾಖಲೆಗಳಿದ್ದರೆ ನೀಡಲಿ ಎಂದು ಹೆಚ್ಡಿಕೆ ಹಾಗೂ ಆರ್ ಅಶೋಕ್ ಅವರಿಗೆ ಸವಾಲ್ ಹಾಕಿದರು. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಒಳಮೀಸಲಾತಿ ಗೊಂದಲ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದರು.



