HomeGadag Newsಮೂರು ದಿನದಲ್ಲಿ ಮನೆ ಹಕ್ಕುಪತ್ರ ನೀಡಿ: ಶಾಸಕ ಡಾ. ಎಚ್.ಕೆ. ಪಾಟೀಲ

ಮೂರು ದಿನದಲ್ಲಿ ಮನೆ ಹಕ್ಕುಪತ್ರ ನೀಡಿ: ಶಾಸಕ ಡಾ. ಎಚ್.ಕೆ. ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಜನತಾ ದರ್ಶನದ ಮಾದರಿಯಲ್ಲಿ ಪ್ರಜಾ ಸೇವಾ ಅಭಿಯಾನವನ್ನೂ ಯಶಸ್ವಿಗೊಳಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗದಗ-ಬೆಟಗೇರಿ ಪಾಲಾ-ಬಾದಾಮಿ ರಸ್ತೆಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯದ ಆವರಣದಲ್ಲಿ ಶನಿವಾರ ಪ್ರಜಾ ಸೇವಾ ಇಲಾಖೆಯಿಂದ ‘ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿ ಸಹಕಾರ’ ಆಶಯದಡಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಅಭಿಯಾನ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಬಳಿಗೆ ತೆರಳಿ ಸಮಸ್ಯೆ ಆಲಿಸುವುದು, ಅರ್ಜಿ ಸ್ವೀಕರಿಸಿ ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವುದು ಅಭಿಯಾನದ ಉದ್ದೇಶ. ಜನರು ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸ್ವೀಕರಿಸಿದ ಅರ್ಜಿಗಳ ವಾಸ್ತವಾಂಶ ಪರಿಶೀಲಿಸಿ ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.

ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಮಧ್ಯಾಹ್ನ 12 ಗಂಟೆಯೊಳಗೆ 205 ಹಾಗೂ ನಂತರ ಸೇರಿದಂತೆ ಒಟ್ಟು 445 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 380 ಅರ್ಜಿಗಳು ಮನೆಗಾಗಿ ಸಲ್ಲಿಕೆಯಾಗಿರುವುದು ಗಮನಾರ್ಹ. ಅರ್ಹ ಕುಟುಂಬಗಳಿಗೆ ವಿವಿಧ ವಸತಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮನೆಗಾಗಿ ಬಂದ 380 ಅರ್ಜಿಗಳನ್ನು ವಿಳಂಬವಿಲ್ಲದೆ ಪರಿಶೀಲಿಸಿ, ಅರ್ಜಿದಾರರ ಅರ್ಹತೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಮೂರು ದಿನಗಳೊಳಗಾಗಿ ಕಾನೂನುಬದ್ಧವಾಗಿ ಹಕ್ಕುಪತ್ರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಹೇಳಿದರು.

ಗದಗ ಜಿಲ್ಲೆಯಲ್ಲಿ ಮನೆ ಹಾಗೂ ಹಕ್ಕುಪತ್ರಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಕ್ರಮಗಳ ಕುರಿತು ಸಾರ್ವಜನಿಕರಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಜಾ ಸೇವಾ ಅಭಿಯಾನ ಕೇವಲ ಅರ್ಜಿ ಸ್ವೀಕರಿಸುವ ಕಾರ್ಯಕ್ರಮವಾಗಬಾರದು. ಅರ್ಹರಿಗೆ ಸರ್ಕಾರದ ಸೇವೆ ತಲುಪುವವರೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನರು ಮತ್ತು ಅಧಿಕಾರಿಗಳ ಸಹಕಾರದಿಂದಲೇ ಅಭಿಯಾನ ಯಶಸ್ವಿಯಾಗಲಿದೆ.

— ಡಾ. ಎಚ್.ಕೆ. ಪಾಟೀಲ, ಶಾಸಕ

ಜನತಾ ದರ್ಶನ ಮಾದರಿಯಲ್ಲಿ ಕಾರ್ಯ

ಜಿಲ್ಲೆಯಲ್ಲಿ ನಾಲ್ಕು ಬಾರಿ ನಡೆದ ಜನತಾ ದರ್ಶನಗಳಲ್ಲಿ 2,987ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಬಹುತೇಕ ಅರ್ಜಿಗಳು ವಿಲೇವಾರಿಯಾಗಿವೆ. ಸದ್ಯ 147 ಅರ್ಜಿಗಳು ಮಾತ್ರ ಬಾಕಿ ಉಳಿದಿವೆ ಎಂದು ಶಾಸಕ ಎಚ್.ಕೆ. ಪಾಟೀಲ ತಿಳಿಸಿದರು. ಇದೇ ಮಾದರಿಯಲ್ಲಿ ಪ್ರಜಾ ಸೇವಾ ಅಭಿಯಾನದಲ್ಲೂ ಅರ್ಜಿಗಳ ವಿಲೇವಾರಿ ಮಾತ್ರವಲ್ಲದೆ, ಅರ್ಜಿದಾರರಿಗೆ ಮಾಹಿತಿ ನೀಡುವ ಹಾಗೂ ಸೇವೆ ದೊರೆಯುವವರೆಗೆ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img