ವಿಜಯಸಾಕ್ಷಿ ಸುದ್ದಿ, ಗದಗ: ಕಲಿಯುಗದಲ್ಲಿ ವೀರಶೈವ ಧರ್ಮವನ್ನು ಬೋಧಿಸಲು ಬಂದ ಆಚಾರ್ಯರಲ್ಲಿ ಜಗದ್ಗುರು ರೇಣುಕಾಚಾರ್ಯರು ಒಬ್ಬರು. ಅವರು ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ಮಹಾಮಹಿಮರಾಗಿದ್ದಾರೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೀರೇಶ್ವರ ಪುಣ್ಯಾಶ್ರಮದ ಶಿವಕುಮಾರ ಶಾಸ್ತಿçಗಳು ಉಪನ್ಯಾಸ ನೀಡಿ, ಜಗದ್ಗುರು ರೇಣುಕಾಚಾರ್ಯರು ಅಧರ್ಮಿಗಳಿಂದ ಧರ್ಮ ಪರಿಪಾಲನೆ ಮಾಡಿದವರು. ರೇಣುಕಾಚಾರ್ಯರು ಸೋಮೇಶ್ವರ ಲಿಂಗದಿಂದ ಜನಿಸಿದರು ಎಂದು ಹೇಳಲಾಗುತ್ತದೆ. ಭೂಲೋಕಗಳ ಸಂಕಷ್ಟಗಳ ನಿವಾರಣೆಗೆ ಇವರು ಉದ್ಭವಿಸಿದವರು. ಜಗತ್ತಿಗೆ ಲಿಂಗದ, ರುದ್ರಾಕ್ಷಿಯ ಮಹಿಮೆಯನ್ನು ಸಾರಿದ್ದಾರೆ. ವೀರಶೈವ ಧರ್ಮವೆಂದರೆ ವಿಕಲ್ಪರಹಿತ ಧರ್ಮ ವೆಂದು ರೇಣುಕಾಚಾರ್ಯರು ಸಾರಿದ್ದಾರೆ. ಮನುಷ್ಯನು ಧರ್ಮ ರಹಿತನಾಗಬಾರದು. ಧರ್ಮದಿಂದಲೇ ಲೋಕಕ್ಕೆ ಶಾಂತಿ ಎಂದು ಧರ್ಮದ ಕುರುಹನ್ನು ತಿಳಿಸಿದವರಾಗಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನೆಗಳೂರು ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಮಹಾಸ್ವಾಮಿಗಳು ಮಾತನಾಡಿ, ದೇಶಾದ್ಯಂತ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ಆಚರಿಸಲಾಗುತ್ತದೆ. ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ ತಲೆದೋರಿದಾಗ ಅವುಗಳನ್ನು ಹೊಡೆದೋಡಿಸಲು ಆವಿರ್ಭವಿಸಿದ ಮಹಾನ್ ಗುರುಗಳು ರೇಣುಕಾಚಾರ್ಯರು. ಜಾತಿ-ಜಾತಿಗಳ ಕಂದಕಗಳನ್ನು ತೊಡೆದು ಭೂಮಿಗೆ ಶಿವಸಿದ್ಧಾಂತ ಬೋಧಿಸಿದವರು ರೇಣುಕಾಚಾರ್ಯ ಭಗವತ್ಪಾದರು. ಜಗದ್ಗುರು ರೇಣುಕಾಚಾರ್ಯರ ಕುರಿತು ಶೃದ್ಧೆಯಿಂದ ಅಧ್ಯಯನವಾಗಬೇಕು. ಇವರು ಧರ್ಮಕ್ಕೂ ಸಹ ಸಂವಿಧಾನ ಕೊಟ್ಟಿದ್ದಾರೆ. ರೇಣುಕಾಚಾರ್ಯರು ಪರಮಗುರುಗಳು, ಮಹಾನ್ ಸ್ವಾಮಿ, ಮಹಾನ್ ಗುರುಗಳಾಗಿದ್ದಾರೆ ಎಂದು ಹಾನಗಲ್ ಕುಮಾರಸ್ವಾಮಿಗಳು ತಿಳಿಸಿದ್ದಾರೆ. ರೇಣುಕಾಚಾರ್ಯರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಮಕ್ಕಳಿಗೆ ಬೋಧನೆ ಮಾಡುವ ಸಂಕಲ್ಪ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಠದ ಚಂದ್ರಶೇಖರ ದೇವರು, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ತಾಲೂಕಾ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಗಣ್ಯರಾದ ಡಿ.ಆರ್. ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಗಣ್ಯರು, ಹಿರಿಯರು ಹಾಜರಿದ್ದರು.
ಅಕ್ಷತಾ ಹಿರೇಮಠ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ ಸ್ವಾಗತಿಸಿದರು. ಆರ್.ಬಿ. ಚಿನಿವಾಲರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹಲವಾರು ಮಹಾನ್ ವ್ಯಕ್ತಿಗಳ, ಯೋಗಿಗಳ ಜಯಂತಿಯನ್ನು ಆಚರಿಸುವ ಮೂಲ ಉದ್ದೇಶವೆಂದರೆ ಅವರ ಸಂದೇಶಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಜಗದ್ಗುರು ರೇಣುಕಾಚಾರ್ಯರನ್ನು ರೇವಣಾರಾಧ್ಯ ಅಥವಾ ರೇವಣಸಿದ್ಧ ಎಂದು ಕರೆಯುತ್ತಾರೆ. ಜಗದ್ಗುರು ರೇಣುಕಾಚಾರ್ಯರು ಧರ್ಮದಿಂದಲೇ ವಿಶ್ವಕ್ಕೆ ಶಾಂತಿ, ಮಾನವ ಧರ್ಮಕ್ಕೆ ಜಯವಾಗಲಿ ಎಂದು ಸಾರಿದ್ದಾರೆ. ಸಮಾಜದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆಗಳನ್ನು ಹೋಗಲಾಡಿಸಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಬೋಧಿಸಿ ಲೋಕಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ.
– ಎಚ್.ಕೆ. ಪಾಟೀಲ
ಜಿಲ್ಲಾ ಉಸ್ತುವಾರಿ ಸಚಿವರು.



