ನವದೆಹಲಿ: ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ, ಮನೀಶ್ ಸಿಸೋಡಿಯಾ ಹಾಗೂ ಇತರರಿಗೆ ನ್ಯಾಯಾಲಯ ಖುಲಾಸೆ ನೀಡಿದ ಹಿನ್ನೆಲೆ ಮಾತನಾಡಿದ ಅವರು, ನರೇಂದ್ರ ಮೋದಿ ಮತ್ತು ಅಮಿತ್ ಶಾ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ನ್ಯಾಯಾಲಯ ಪ್ರಕರಣವನ್ನು ನಕಲಿ ಮತ್ತು ವಿಚಾರಣೆಗೆ ಅನರ್ಹವೆಂದು ಹೇಳಿರುವುದಾಗಿ ಉಲ್ಲೇಖಿಸಿದ ಕೇಜ್ರಿವಾಲ್, ತಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ಆರೋಪಿಸಿದರು.
ದೆಹಲಿಯಲ್ಲಿ ಚುನಾವಣೆ ನಡೆಸಿ ಫಲಿತಾಂಶ ನೋಡೋಣ ಎಂದು ಸವಾಲು ಹಾಕಿದ ಅವರು, ಬಿಜೆಪಿ ಹತ್ತಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದರು. 2021–22ರ ಅಬಕಾರಿ ನೀತಿ ರೂಪಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಆರೋಪಿಸಿತ್ತು. ಆದರೆ ನ್ಯಾಯಾಲಯ ಪ್ರಾಸಿಕ್ಯೂಷನ್ ಪುರಾವೆಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಎಂದು ತೀರ್ಪು ನೀಡಿದೆ.



