ವಿಜಯಸಾಕ್ಷಿ ಸುದ್ದಿ, ಧಾರವಾಡ : ಮೇ 7ರಂದು ಜರುಗಿರುವ ಧಾರವಾಡ-11 ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4ರಂದು ಜರುಗಲಿದ್ದು, ಮತ ಎಣಿಕೆ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಭಾರತ ಚುನಾವಣಾ ಆಯೋಗ ನೀಡಿದೆ. ಪ್ರತಿ ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟ್, ಮತ ಎಣಿಕಾ ಏಜೆಂಟರು ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಬೇಕೆಂದು ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ ಮಾತನಾಡಿದರು.
ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರಲು ಅವಕಾಶವಿಲ್ಲ. ಯಾವುದೇ ರೀತಿಯ ಆಯುಧ, ಗುಟಕಾ, ಬೀಡಿ ಸಿಗರೇಟ್, ಎಲೆ ಅಡಿಕೆ ತರುವುದನ್ನು ಸಹ ನಿರ್ಬಂಧಿಸಲಾಗಿದೆ. ಚುನಾವಣಾ ಆಯೋಗದ ಎಲ್ಲ ನಿಯಮಗಳನ್ನು ಪಾಲಿಸುವ ಮೂಲಕ ಮತ ಎಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ತಿಳಿಸಿದರು.
ಜೂನ್ 4ರಂದು ಬೆಳಿಗ್ಗೆ ಸ್ಟ್ರಾಂಗ್ ರೂಮ್ ತೆರೆಯುವುದರಿಂದ ಹಿಡಿದು ಸಂಜೆ ಇವಿಎಂ ಮಷಿನ್ಗಳು ಭದ್ರತಾ ಕೊಠಡಿಗೆ ಹೋಗುವವರೆಗಿನ ಎಲ್ಲ ಹಂತಗಳನ್ನು ಚುನಾವಣಾಧಿಕಾರಿ ದಿವ್ಯ ಪ್ರಭು ಸಭೆಯಲ್ಲಿ ವಿವರಿಸಿದರು. ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾತನಾಡಿ, ವಾಹನ ಪಾರ್ಕಿಂಗ್ ಸ್ಥಳ, ಪೊಲೀಸ್ ಪರಿಶೀಲನಾ ಸ್ಥಳಗಳು, ಬಂದೊಬಸ್ತ್ ಬಗ್ಗೆ ಸಭೆಯಲ್ಲಿ ವಿವರಿಸಿದರು.
ಸಭೆಯಲ್ಲಿ ವಿವಿಧ ಚುನಾವಣಾ ಕರ್ತವ್ಯಗಳ ನೋಡಲ್ ಅಧಿಕಾರಿಗಳಾದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿ.ಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಸಂತೋಷ ಬಿರಾದಾರ, ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ಅಜೀಜ್ ದೇಸಾಯಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ.ಬಿ ಹಾಗೂ ಭಾರತೀಯ ಜನತಾ ಪಕ್ಷ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಿವಿಧ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ಧತೆ ಮಾಡಲಾಗಿದೆ. ಅಂದು ಮತ ಎಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ, ಗುಂಪು ಸೇರುವುದು ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.



