HomeGadag Newsಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ವೈಶಾಲಿ ಎಂ.ಎಲ್

ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ವೈಶಾಲಿ ಎಂ.ಎಲ್

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನ-ಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.

ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಜರುಗಿದ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಅತಿವೃಷ್ಟಿಯಿಂದ ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್ಗಳನುಡೀಗಾಗಲೇ ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದಲ್ಲಿ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು ಎಂದರು.

ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗಬಹುದಾದ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳಗಳನ್ನು ಗುರುತಿಸಲಾಗಿದೆ. ಹಾಗೆಯೇ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳಗಳನ್ನು ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ ಎಂದರು.

ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.

ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದೆ. ಆ ಭಾಗದ ಅಧಿಕಾರಿಗಳು ಕ್ಷೇತ್ರದ ಕುರಿತು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾಧಿತವಾಗುವ ಹಳ್ಳಿಗಳೆಂದು ಗುರುತಿಸಲಾಗಿದ್ದು, ಅಲ್ಲಿಯೂ ಸಹ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

 

LEAVE A REPLY

Please enter your comment!
Please enter your name here

E-Paper

E-paper

Must Read

spot_img