ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರಕಾರಿ ನೌಕರರ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ಕುರಿತ ಚರ್ಚೆ ನಡೆಸುವ ಮಹತ್ವದ ಸಮಿತಿ ಸಭೆಯು ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರ ಅಧ್ಯಕ್ಷತೆಯಲ್ಲಿ ಆ. 12ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಳೆಯ ಪಿಂಚಣಿ ಯೋಜನೆ ಜಾರಿ ಸಂಬAಧ ಸರಕಾರದ ಕಾರ್ಯದರ್ಶಿ ರಮಣದೀಪ್ ಅವರ ನೇತೃತ್ವದ ಸಮಿತಿ ಈಗಾಗಲೇ ಅಧ್ಯಯನ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದೆ. ಸರಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ, ಅಧ್ಯಯನ ನಡೆಸಿ, ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದಾರೆ. ಉಭಯ ಕಾರ್ಯದರ್ಶಿಗಳು ನೀಡಿರುವ ವರದಿ ಕುರಿತ ಚರ್ಚೆ ಸಭೆಯಲ್ಲಿ ನಡೆಯಲಿದೆ.
ಹೊಸ ಪಿಂಚಣಿ ಯೋಜನೆ ಕೈಬಿಡಿ, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಎಂದು ರಾಜ್ಯ ಸರಕಾರ ನೌಕರ ಸಂಘ ಸಿ.ಎಸ್. ಷಡಕ್ಷರಿ ಅವರ ಮಾರ್ಗದರ್ಶನದಲ್ಲಿ ಹೋರಾಟ ನಡೆಸಿದ್ದಾರೆ. ಸಂಘದ ಹಲವು ವರ್ಷಗಳ ಫಲ ಸಿಗುವ ಕಾಲ ಸನ್ನಿಹಿತವಾಗಿದೆ ಎಂದು ಡಾ. ಬಸವರಾಜ ಬಳ್ಳಾರಿ ಹೇಳಿದ್ದಾರೆ.



