ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೌಲಾನಾ ಮಜಹರಖಾನ್ ಪಠಾಣ, ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ವಿಶ್ವಕ್ಕೆ ಶಾಂತಿ, ಕರುಣೆ ಹಾಗೂ ಸಹಬಾಳ್ವೆಯ ಸಂದೇಶ ಸಾರಿದ್ದಾರೆ. ಅವರ ಜನ್ಮದಿನ ಮುಸ್ಲಿಮರಿಗೆ ಅತ್ಯಂತ ಪವಿತ್ರವಾಗಿದ್ದು, ಎಲ್ಲರೂ ಪರಸ್ಪರ ಸೌಹಾರ್ದದಿಂದ ಬದುಕಬೇಕು ಎಂದರು.
ಹಬ್ಬದ ಅಂಗವಾಗಿ ಪಟ್ಟಣದ ಆಸಾರ ಓಣಿ, ಮಕಾನಗಲ್ಲಿ, ತಳಗೇರಿ, ಇಂಗಲಾಪುರ ಓಣಿ ಸೇರಿದಂತೆ ವಿವಿಧೆಡೆ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಬಳಿಕ ಹಜರತ್ ಮಹಬೂಬ್ ಸುಬಾನಿ ದರ್ಗಾದಿಂದ ಬೃಹತ್ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪಟ್ಟಣದ ಪ್ರಮುಖ ವೃತ್ತ ಹಾಗೂ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಧಾರ್ಮಿಕ ಘೋಷಣೆಗಳು ಮೊಳಗಿದವು. ಈ ವೇಳೆ ಹಬ್ಬದ ಸಂಭ್ರಮ ಎಲ್ಲೆಡೆ ಕಂಡುಬಂತು.



