ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಳೆ ಬಂದರೂ ಸಮಯಕ್ಕೆ ಬರಲಿಲ್ಲ… ಹೊಲಗಳು ಹಸಿರಾಗಿ ಕಾಣುತ್ತಿದ್ದರೂ ರೈತರ ಕೈಗೆ ಬೆಳೆ ಬಂದಿಲ್ಲ… ಇಂತಹ ಸಂಕಷ್ಟದ ಪರಿಸ್ಥಿತಿಯನ್ನು ಸ್ವತಃ ಹೊಲಗಳಿಗೆ ತೆರಳಿ ವೀಕ್ಷಿಸಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸಿದ ಸಚಿವರು, ರೈತರು, ರೈತ ಮುಖಂಡರು ಹಾಗೂ ಕೃಷಿ ತಜ್ಞರೊಂದಿಗೆ ಚರ್ಚಿಸಿ ಬೆಳೆಗಳ ವಾಸ್ತವ ಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಿದರು.
ಜಿಲ್ಲೆಯ ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಸುಮಾರು 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಹಾಗೂ ಉದ್ದು, 40 ಸಾವಿರ ಹೆಕ್ಟೇರ್ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಇದರ ಜೊತೆಗೆ ಸೋಯಾಬೀನ್, ಹತ್ತಿ, ಕಡಲೆಕಾಯಿ, ಕಬ್ಬು, ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಮಳೆಯ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿವೆ.
ಸಾಮಾನ್ಯವಾಗಿ ಹೊಲಗಳು ಹಸಿರಾಗಿ ಕಾಣುತ್ತಿದ್ದರೂ ಬೆಳೆಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಅಗತ್ಯ ಸಮಯದಲ್ಲಿ ಮಳೆಯಾಗದ ಪರಿಣಾಮ ಬೆಳೆಗಳು ಕುಂಠಿತಗೊಂಡಿದ್ದು, ರೈತರು ಭಾರೀ ನಷ್ಟ ಅನುಭವಿಸುವಂತಾಗಿದೆ. ಕೆಲವೆಡೆ ಹೆಚ್ಚು ಮಳೆಯಾದರೂ ಅದು ಸರಿಯಾದ ಸಮಯದಲ್ಲಿ ಮತ್ತು ಸಮರ್ಪಕ ಪ್ರಮಾಣದಲ್ಲಿ ಸುರಿಯದ ಕಾರಣ ಬೆಳೆಗಳಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಚಿವರು ಹೇಳಿದರು.
ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಉದ್ದೇಶದಿಂದ ಬೆಳೆ ವಿಮೆ ಸೇರಿದಂತೆ ಸರ್ಕಾರ ಹಾಗೂ ವಿಮಾ ಸಂಸ್ಥೆಗಳ ಮೂಲಕ ದೊರೆಯಬಹುದಾದ ಎಲ್ಲ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಶಾಸಕರು ಹಾಗೂ ರೈತ ಮುಖಂಡರ ಸಲಹೆಗಳನ್ನೂ ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಬರ ಘೋಷಣೆಗೆ ಕೇಂದ್ರ ಸರ್ಕಾರದ ನಿಗದಿತ ತಾಂತ್ರಿಕ ಮಾನದಂಡಗಳಿದ್ದು, ಅವುಗಳ ಅನ್ವಯವೇ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಆದರೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅಗತ್ಯ ನೆರವು ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.
ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಅಲ್ಪ ಪ್ರಮಾಣದ ಮಳೆಯಾದ ಕಾರಣ ಹೆಸರು ಮತ್ತು ಹತ್ತಿ ಬೆಳೆಗಳು ಹೊರನೋಟಕ್ಕೆ ಹಸಿರಾಗಿದ್ದರೂ ಒಳಗೆ ಬೆಳೆ ಇಲ್ಲದಂತಾಗಿದೆ. ಹೆಸರು ಬೆಳೆ ಹೂ ಬಿಡದೆ ಒಣಗುವ ಸ್ಥಿತಿಗೆ ತಲುಪಿದ್ದು, ಹತ್ತಿ ಬೆಳೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಯಿ ಬರುತ್ತಿಲ್ಲ. ಆದ್ದರಿಂದ ಪರಿಹಾರ ವಿತರಣೆಯ ಸಂದರ್ಭದಲ್ಲಿ ಸರ್ಕಾರ ಮಾನದಂಡಗಳನ್ನು ಸಡಿಲಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅಂಕಿ-ಅಂಶಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಎರಡು ವರ್ಷಗಳಿಂದ ರೈತರಿಗೆ ಬೆಳೆ ವಿಮೆ ಸಮರ್ಪಕವಾಗಿ ದೊರೆಯದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಖಾಸಗಿ ವಿಮಾ ಕಂಪನಿಗಳಿಗಿಂತ ರೈತರ ಹಿತಾಸಕ್ತಿಗೆ ಆದ್ಯತೆ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ವಿಷಯವನ್ನು ತಂದು ರೈತರಿಗೆ ಪರಿಹಾರ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.
ಸಚಿವ ಸಂತೋಷ್ ಲಾಡ್ ಅವರು ಧಾರವಾಡ ತಾಲೂಕಿನ ಹಾರೋಬೆಳವಡಿ ಹಾಗೂ ನವಲಗುಂದ ತಾಲೂಕಿನ ಶಿರೂರ, ಶಿರಕೋಳ, ಮೊರಬ ಮತ್ತು ತಿರ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ರೈತರ ಹೊಲಗಳಲ್ಲಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ನವಲಗುಂದ ತಹಶೀಲ್ದಾರ್ ಸುಧೀರ ಸಾಹುಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಹೊಲಗಳಲ್ಲಿ ಹಸಿರು ಕಾಣುತ್ತಿದ್ದರೂ ಬೆಳೆಗಳ ಬೆಳವಣಿಗೆ ಸಮರ್ಪಕವಾಗಿಲ್ಲ. ರೈತರ ವಾಸ್ತವ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು, ಬೆಳೆ ವಿಮೆ ಸೇರಿದಂತೆ ಎಲ್ಲ ರೀತಿಯ ನೆರವು ದೊರಕಿಸುವ ಪ್ರಯತ್ನ ಮಾಡಲಾಗುವುದು.”
ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ



