ಗದಗ: ಹಜ್ ಯಾತ್ರೆಗೆ ತೆರಳುವ ಆಸೆ ವ್ಯಕ್ತಪಡಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಗದಗದಲ್ಲಿ ವಿನೂತನ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಶಿವರಾಮಕೃಷ್ಣ ಸೇವಾ ಸಮಿತಿ ವತಿಯಿಂದ ಭಿಕ್ಷಾಟನೆ ನಡೆಸಿ, ರಾಯರೆಡ್ಡಿ ಅವರ ಹಜ್ ಯಾತ್ರೆಗೆ ಹಣ ಸಂಗ್ರಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಮುಖಂಡ ರಾಜು ಖಾನಪ್ಪನವರ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಮಾರುಕಟ್ಟೆ ಪ್ರದೇಶದ ವಿವಿಧ ಅಂಗಡಿಗಳಿಗೆ ತೆರಳಿ ಹಣ ಸಂಗ್ರಹಿಸಿದರು. ಸಚಿವ ಬಸವರಾಜ ರಾಯರೆಡ್ಡಿ ಅವರು ಹಜ್ ಯಾತ್ರೆಗೆ ಹೋಗುವ ಆಸೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಅವರ ಯಾತ್ರೆಗೆ ಹಣ ಹೊಂದಿಸುವ ಉದ್ದೇಶದಿಂದ ಈ ರೀತಿಯ ಬಿಕ್ಷಾಟನೆ ನಡೆಸುತ್ತಿದ್ದೇವೆ ಎಂದು ಕಾರ್ಯಕರ್ತರು ವ್ಯಂಗ್ಯವಾಗಿ ಪ್ರತಿಭಟನೆ ನಡೆಸಿದರು.
ಕೊಪ್ಪಳ ಜಿಲ್ಲೆಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹಜ್ ಯಾತ್ರೆಗೆ ತೆರಳುವ ಕುರಿತು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಸಚಿವರ ಈ ಹೇಳಿಕೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಗದಗದಲ್ಲೂ ಅದರ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಮುಸ್ಲಿಂ ಓಲೈಕೆಯ ಭರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಚಿವ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಸಚಿವ ಬಸವರಾಜ ರಾಯರೆಡ್ಡಿ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ರಾಯರೆಡ್ಡಿ ಅವರು ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಕಾರ್ಯಕರ್ತರು, ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ಶಿವರಾಮಕೃಷ್ಣ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದು, ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.



